ಸಾರಿಗೆ ಸಂಸ್ಥೆಯ ಬಸ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ರಾಜ್ಯ ಹೆದ್ದಾರಿ 41ರ ಲೋಣಿ ಕ್ರಾಸ್ ಬಳಿ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಚಡಚಣ

ಸಾರಿಗೆ ಸಂಸ್ಥೆಯ ಬಸ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ರಾಜ್ಯ ಹೆದ್ದಾರಿ 41ರ ಲೋಣಿ ಕ್ರಾಸ್ ಬಳಿ ಸಂಭವಿಸಿದೆ. ಕ್ಯಾಂಟರ್ ವಾಹನದಲ್ಲಿದ್ದ ಹಾವಿನಾಳ ಗ್ರಾಮದ ಅಶೋಕ ಮಹಾದೇವ ಉಟಗಿ, ಇವರ ಪತ್ನಿ ರಾಧಾಬಾಯಿ ಹಾಗೂ ಸಾರಿಗೆ ಬಸ್ ಚಾಲಕ ನಿಡಗುಂದಿ ಗ್ರಾಮದ ಹಣಮಂತ ಚಲವಾದಿ ಮೃತಪಟ್ಟವರು.ಪಟ್ಟಣದಿಂದ ಬಾದಾಮಿ ಕಡೆಗೆ ಸುಮಾರು 30 ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಝಳಕಿ ಕಡೆಯಿಂದ ಚಡಚಣಕ್ಕೆ ಬರುತ್ತಿದ್ದ ಸಿಮೆಂಟ್ ಹೊತ್ತ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದಾಗಿ ಕ್ಯಾಂಟರ್‌ನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 6 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ 17 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಚಡಚಣ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.