ಕನ್ನಡಪ್ರಭ ವಾರ್ತೆ ಅರಸೀಕೆರೆ

ಗ್ರಾಮೀಣ ಭಾಗದ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಹತ್ವದ ಸೇವಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಮಾಡಾಳು ನಿರಂಜನ ಪೀಠದ ಅಧ್ಯಕ್ಷರಾದ ಶ್ರೀ ರುದ್ರಮುನಿ ಸ್ವಾಮೀಜಿ ಹೇಳಿದರು.ತಾಲೂಕಿನ ಕಣಕಟ್ಟೆ ಹೋಬಳಿಯ ಕೆ. ಶಂಕರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡಿಗೊಂಡಿಹಳ್ಳಿ ಗ್ರಾಮದ ಬಡ ಕುಟುಂಬಕ್ಕೆ ಸೇರಿದ ವೃದ್ಧೆ ಕರಿಯಮ್ಮ ಅವರಿಗೆ ವಾತ್ಸಲ್ಯ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರಿಸಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಪೌಷ್ಟಿಕತೆ, ಪರಿಸರ ಸಂರಕ್ಷಣೆ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಗ್ರಾಮೀಣಾಭಿವೃದ್ಧಿಯ ಹಲವು ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸುತ್ತಿದೆ. ವಿಶೇಷವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಈ ಯೋಜನೆಯ ಯಶಸ್ಸಿಗೆ ಪ್ರಮುಖ ಆಧಾರವಾಗಿದೆ ಎಂದು ಹೇಳಿದರು.ಮನೆಯಿಲ್ಲದೇ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಆಶ್ರಯ ನೀಡುವ ಉದ್ದೇಶದಿಂದ ರೂಪುಗೊಂಡಿರುವ ವಾತ್ಸಲ್ಯ ಯೋಜನೆ, ಸಮಾಜದ ಅತಿ ದುರ್ಬಲ ವರ್ಗಗಳಿಗೆ ಬದುಕಿನ ಭರವಸೆ ನೀಡುವ ಕಾರ್ಯ ಮಾಡುತ್ತಿದೆ. ಒಂಟಿ ಜೀವನ ನಡೆಸುತ್ತಿರುವ ನಿರ್ಗತಿಕ ವೃದ್ಧೆ ಕರಿಯಮ್ಮ ಅವರಿಗೆ ಮನೆ ನಿರ್ಮಿಸಿ ಹಸ್ತಾಂತರಿಸಿರುವುದು ಮಾನವೀಯ ಸೇವೆಯ ಉತ್ತಮ ಉದಾಹರಣೆಯಾಗಿದೆ ಎಂದು ಶ್ರೀಗಳು ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, “ಬಡವರ ಬದುಕಿಗೆ ಆಶ್ರಯ ನೀಡುವ ಉದ್ದೇಶದಿಂದ ವಾತ್ಸಲ್ಯ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ಅನೇಕ ಫಲಾನುಭವಿಗಳಿಗೆ ಮನೆ ನಿರ್ಮಿಸಿ ನೀಡಲಾಗಿದ್ದು, ಇದು ಹಾಸನ ಜಿಲ್ಲೆಯಲ್ಲಿ ಮಾನವೀಯ ಸೇವೆಯ ಮೈಲಿಗಲ್ಲಾಗಿದೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬಾಣಾವರ ಯೋಜನಾಧಿಕಾರಿ ಸೋಮನಾಥ್, ವಲಯ ಮೇಲ್ವಿಚಾರಕಿ ಕಲಾಶ್ರೀಪಿ, ಸೇವಾ ಪ್ರತಿನಿಧಿ ನಾಗೇಶ್, ವಲಯ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.