ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಅಭಿವೃದ್ಧಿಯಿಂದಾಗಿ ರೈತರ ಜಮೀನಿಗೆ ಭಾರೀ ಬೆಲೆ ಬಂದಿದ್ದು, ಅನ್ನದಾತರರು ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು ಹೇಳಿದರು.ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗ್ರಾಪಂ ಕಟ್ಟಡ, ಎಸ್.ಡಬ್ಲ್ಯೂಎಂ ಘಟಕ, ಗೋದಾಮು, ಎನ್.ಆರ್.ಎಲ್.ಎಂ ಘಟಕ ಮತ್ತು ಪ್ರೌಢಶಾಲೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಕಾರ್ಯಗಳಿಂದಾಗಿ ಆರ್ಥಿಕವಾಗಿ ಸಮರ್ಥರಾಗಿರುವ ರೈತರು ತಮ್ಮ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ₹ 100 ಕೋಟಿ ಸಿ.ಎಸ್.ಆರ್ ಅನುದಾನದಲ್ಲಿ ಬಬಲೇಶ್ವರ ಮತ ಕ್ಷೇತ್ರದ ಗ್ರಾಮೀಣ ಭಾಗದ ಶಾಲೆಗಳನ್ನು ಬೆಂಗಳೂರು ಮಾದರಿಯಲ್ಲಿ ಸುಧಾರಣೆ ಮಾಡಲಾಗುವುದು. ಶಾಲಾ ಆವರಣದಲ್ಲಿ ಕ್ರೀಡಾ ಸಲಕರಣೆ ವ್ಯವಸ್ಥೆ, ಅಂಗನವಾಡಿಗಳಲ್ಲಿ ಪ್ಲೇ ಸ್ಕೂಲ್ ಮಾದರಿ ಸೌಲಭ್ಯ ಒದಗಿಸಲಾಗುವುದು. ಶಾಲಾ ಕಟ್ಟಡಗಳ ನಿರ್ಮಾಣ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ಯುವಕರಿಗೆ ಓಪನ್ ಜಿಮ್ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೇ, ಮತಕ್ಷೇತ್ರ ವ್ಯಾಪ್ತಿಯಲ್ಲಿ ₹ 319 ಕೋಟಿ ವೆಚ್ಚದಲ್ಲಿ ನೀರಾವರಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ ಬಾಕಿ ಇರುವ 25 ಸಾವಿರ ಎಕರೆಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಪಂ ಸಿಇಒ ರಿಷಿ ಆನಂದ, ಜಿಲ್ಲೆಯಲ್ಲಿ ಜಲ, ವೃಕ್ಷ, ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಸಚಿವ ಎಂ.ಬಿ.ಪಾಟೀಲ ಅವರು ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆದರ್ಶ ಗ್ರಾಮ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.ಇದೇ ವೇಳೆ ಸಚಿವರು ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಈರಗೊಂಡ ಬಿರಾದಾರ, ಉಮೇಶ ಮಲ್ಲಣ್ಣವರ, ಬಾಪುಗೌಡ ಪಾಟೀಲ ಶೇಗುಣಸಿ, ರಾಮಲಿಂಗ ಕೊಕಟನೂರ, ಎಸ್.ಎಂ.ಸಜ್ಜನ, ಹಣಮಂತ ದಳವಾಯಿ, ಮುತ್ತಪ್ಪ ಶಿವಣ್ಣವರ, ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಉಪಾಧ್ಯಕ್ಷೆ ಸಂಗೀತಾ ನರಳಿ, ತಾಪಂ ಇಒ ಜೆ.ಎಸ್.ಪಠಾಣ, ಗ್ರಾಮೀಣ ವಲಯ ಬಿಇಒ ಪ್ರಮೋದಿನಿ ಬಳೂಲಮಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು, ಗ್ರಾಮದ ಹಿರಿಯರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ಪ್ರೌಢಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪಿಡಿಒ ರವಿ ವೆಂಕಣ್ಣ ಮಾಸರಡ್ಡಿ ಸ್ವಾಗತಿಸಿದರು. ಶಿಕ್ಷಕ ಶ್ರೀಶೈಲ ಮಠಪತಿ ನಿರೂಪಿಸಿದರು.ಕೋಟ್ಒಂದು ಕಾಲದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದ ಮತ್ತು ಈ ಭಾಗದ ಅಸ್ಮಿತೆಯಾಗಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗತವೈಭವಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಸರ್ಕಾರದಿಂದ ಕನಿಷ್ಠ ₹ 50 ಕೋಟಿ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದೆ. ರೈತರು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಈ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸೋಣ. ಈ ಭಾಗದ ಅಭಿವೃದ್ಧಿಗೆ ಬದ್ಧನಾಗಿ ಶಕ್ತಿಮೀರಿ ಶ್ರಮಿಸುತ್ತೇನೆ.
ಎಂ.ಬಿ.ಪಾಟೀಲ, ಉಸ್ತುವಾರಿ ಸಚಿವ