ಸಾರಾಂಶ
ಚಿತ್ರದುರ್ಗ: ಸಾರ್ವಜನಿಕರು ಯಾವುದೇ ಅಡೆತಡೆ ಇಲ್ಲದೇ ಸಮಾಜದಲ್ಲಿ ಘನತೆಯಿಂದ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು.
ಚಿತ್ರದುರ್ಗ ತಾಲೂಕು ಜಿ.ಆರ್.ಹಳ್ಳಿ ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಯುವ ಜನರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅವಶ್ಯಕತೆ, ಉಳಿವಿಗಾಗಿ, ಅಸ್ತಿತ್ವಕ್ಕಾಗಿ ಇರಬೇಕಾದ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯವೇ ಮಾನವ ಹಕ್ಕುಗಳು. ಎಲ್ಲರಿಗೂ ಯಾವುದೇ ಲಿಂಗಭೇದವಿಲ್ಲದೇ ಸಿಗುವಂತಹ ಹಕ್ಕು ಮತ್ತು ಸ್ವಾತಂತ್ರ್ಯ. ಮಾನವ ಹಕ್ಕುಗಳ ಇಲ್ಲದಿದ್ದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿ ಜೊತೆಗೆ ಮನುಷ್ಯನ ಅಸ್ತಿತ್ವ ಕಳೆದುಹೋಗಲಿದೆ. ಹಾಗಾಗಿ ಮಾನವ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯಮಟ್ಟದಲ್ಲಿ ಆಯೋಗ ಇರಲಿದ್ದು, ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ರಕ್ಷಣೆ ನೀಡಿ, ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿದರು.
ಜಿಲ್ಲಾ ಯುವಜನ ಅಧಿಕಾರಿ ಎನ್.ಸುಹಾಸ್ ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ದೇಶದೆಲ್ಲೆಡೆ ರಾಷ್ಟ್ರೀಯ ಯುವ ದಿನಾಚರಣೆ ಆಚರಿಸಲಾಗುತ್ತಿದೆ. ಯುವಜನರನ್ನು ಒಳ್ಳೆಯ ಪ್ರಜೆಗಳಾಗಿ, ಉತ್ತಮ ವ್ಯಕ್ತಿತ್ವ ನಿರ್ಮಾಣ, ದೇಶದ ಪ್ರಗತಿಯಲ್ಲಿ ಯುವಜನರು ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಯುವ ದಿನ ಆಚರಿಸಲಾತ್ತಿದೆ ಎಂದರು.ಭಾರತ ಹೆಚ್ಚಿನ ಯುವ ಜನರನ್ನು ಹೊಂದಿರುವ ದೇಶವಾಗಿದ್ದು, ಯುವ ಜನರು ದೇಶದ ನಿರ್ಮಾಣದ ಕಡೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದರ ಕಡೆ ಒಲವು ತೋರಬೇಕು. ಸ್ವಾಮಿ ವಿವೇಕಾನಂದರ ಸಂದೇಶ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ದಾರಿಯಲ್ಲಿ ನಡೆಯಬೇಕೆಂದು ಸಲಹೆ ನೀಡಿದರು.
ಸ್ನಾತಕೋತ್ತರ ಅಧ್ಯಯನ ಕೇಂದ್ರ ಕನ್ನಡ ವಿಭಾಗದ ವಿಷಯ ಸಂಯೋಜಕ ಡಾ.ಎಚ್.ಜಿ.ವಿಜಯಕುಮಾರ್ ಮಾತನಾಡಿ, ಪ್ರತಿಯೊಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವವಾದುದು. ಜಾತಿ, ಧರ್ಮ, ರಾಜಕೀಯ ಪಕ್ಷ ಮೀರಿ ಯುವ ಸಮುದಾಯ ಹೊರಬಂದರೆ ಸದೃಢ ರಾಜ್ಯ ನಿರ್ಮಾಣ ಮಾಡಬಹುದು ಎಂದರು.ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕ ಡಿ.ಹೆಚ್.ಗಿರೀಶ, ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕಿ ನಿವೇದಿತಾ ಇದ್ದರು.