ಸಾರಾಂಶ
ಆರ್.ಮರಿಜೋಸೆಫ್ ಒತ್ತಾಯ
ಕನ್ನಡಪ್ರಭ ವಾರ್ತೆ ಹಾಸನಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಈ ಕೂಡಲೇ ಬಂಧಿಸಬೇಕೆಂದು ದಲಿತ ವಿಮೋಚನೆ ಮತ್ತು ಮಾನವ ಹಕ್ಕುಗಳ ವೇದಿಕೆ ಜಿಲ್ಲಾಧ್ಯಕ್ಷ ಆರ್. ಮರಿಜೋಸೆಫ್ ಅಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ‘ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ. ರೇವಣ್ಣ ಇಬ್ಬರನ್ನೂ ಬಂಧಿಸಿ ಅವರ ಕುಟುಂಬಕ್ಕೆ ಭದ್ರತೆ ನೀಡುತ್ತಿರುವ ಎಸ್ಕಾರ್ಟ್ ಅನ್ನು ಸರ್ಕಾರವು ಕೂಡಲೇ ವಾಪಸ್ ಪಡೆದುಕೊಂಡು ಮುಕ್ತವಾಗಿ ತನಿಖೆ ನಡೆಸಲು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಒತ್ತಾಯಿಸಲಾಯಿತು.ಸಂಸದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಹಾಲಿ ಶಾಸಕ ಎಚ್.ಡಿ. ರೇವಣ್ಣ ಕುಟುಂಬಕ್ಕೆ ನೀಡಿರುವ ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆಯಬೇಕು. ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಭದ್ರತೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಕುಟುಂಬದ ಸ್ಥಿರ ಹಾಗೂ ಚರ ಆಸ್ತಿಯನ್ನು ಮುಟ್ಟುಗೋಲು ಮಾಡಿಕೊಂಡು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಾವಿರಾರು ಕುಟುಂಬಗಳಿಗೆ ಇವರ ಆಸ್ತಿ ಹಂಚಿಕೆ ಮಾಡಬೇಕು ಎಂದು ಹೇಳಿದರು.
ರೇವಣ್ಣ ಹಾಗೂ ಪ್ರಜ್ವಲ್ ಅವರ ಕುಟುಂಬಗಳ ಪಾಸ್ಪೋರ್ಟ್ ವಶಪಡಿಸಿಕೊಂಡು ತಲೆ ಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣರಿಗೆ ರೆಡ್ ಕಾರ್ನ್ ನೋಟಿಸ್ ಜಾರಿ ಮಾಡಿ ವಿದೇಶದಿಂದ ವಾಪಸ್ ಕರೆ ತಂದು ತನಿಖೆ ನಡೆಸಿ ಜೈಲು ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಹುಳುವಾರೆ, ಎಂ.ವಿ.ಗೋವಿಂದರಾಜು ಇತರರು ಇದ್ದರು.