ಕನ್ನಡಪ್ರಭ ವಾರ್ತೆ ಮದ್ದೂರು
ನಿರುದ್ಯೋಗ ಸಮಸ್ಯೆ, ಆರ್ಥಿಕ ಸಂಕಷ್ಟ ಮತ್ತು ಲೈಂಗಿಕ ದೌರ್ಜನ್ಯಗಳು ಮಾನವ ಕಳ್ಳ ಸಾಗಾಣಿಕೆಗೆ ಮೂಲ ಕಾರಣವಾಗಿದೆ ಎಂದು ಜೆಎಂಎಫ್ಸಿ ನ್ಯಾಯಾಲಯದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಂ.ಶೃತಿ ಗುರುವಾರ ಹೇಳಿದರು.ಪಟ್ಟಣದ ಸೆಂಟ್ ಆನ್ಸ್ ಕಾನ್ವೆಂಟ್ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ದಲ್ಲಿ ಜಗತ್ತು ಎಷ್ಟೇ ಮುಂದುವರೆದಿದ್ದರೂ ಸಹ ನಾವು ನಮಗೆ ಅರಿವಿಲ್ಲದಂತೆ ಅಪರಾಧ ಜಗತ್ತಿಗೆ ಬಲಿಯಾಗುತ್ತಿದ್ದೇವೆ. ಜಗತ್ತಿನ ಪ್ರಬಲ ಸಮಸ್ಯೆಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಮುಖವಾಗಿದೆ. ಶೇ.72ರಷ್ಟು ಮಂದಿಮಾನವ ಕಳ್ಳ ಸಾಗಾಣಿಕೆಯ ಮೂಲಕ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರು, ಬಾಲಕರು ಇದಕ್ಕೆ ಬಲಿಯಾಗುತ್ತಿದ್ದಾರೆ ಎಂದರು.ಈ ಕೃತ್ಯಕ್ಕೆ ನಿರುದ್ಯೋಗ ಸಮಸ್ಯೆ, ಆರ್ಥಿಕ ಸಂಕಷ್ಟ ಮತ್ತು ಬಡತನ ಕಾರಣವಾಗಿದೆ. ಇವುಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ವ್ಯಕ್ತಿಗಳು ಲಿಂಗಾನುಪಾತ ಕಡಿಮೆ ಇರುವ ಪ್ರದೇಶಗಳಲ್ಲಿ ಇಂತಹ ದಂಧೆ ನಡೆಸುವುದರೊಂದಿಗೆ ಉದ್ಯೋಗದ ಆಮಿಷವೊಡ್ಡಿ ಲೈಂಗಿಕ ಕ್ರಿಯೆಗೆ ಮಹಿಳೆಯರು, ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಳ್ಳುವ ಜೊತೆಗೆ ಪುಟ್ಟ ಮಕ್ಕಳನ್ನು ಉಚ್ಚಾಟನೆಗೆ ದುಡುತ್ತಿದ್ದಾರೆ ಎಂದರು.
ಆಳುವ ಸರ್ಕಾರಗಳು ಗ್ರಾಮೀಣ ಭಾಗದ ಜನರಿಗೆ ಶಿಕ್ಷಣದೊಂದಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವುದರಿಂದ ಜೊತೆಗೆ ಪೋಷಕರುಗಳಿಗೆ ಇಂತಹ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಥಮ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ತಾಲೂಕು ಕಾನೂನು ಸೇವಾ ಸಮಿತಿ ಉಚಿತ ಕಾನೂನು ಸಲಹೆಗಾರರಾದ ಎಸ್.ಜಯರಾಮ್, ಎಚ್.ಬಿ.ನಾಗೇಶ್ ಮಾನವ ಕಳ್ಳ ಸಾಗಾಣಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಸೆಂಟ್ ಆನ್ಸರ್ ಕಾನ್ವೆಂಟ್ ವ್ಯವಸ್ಥಾಪಕಿ ಎಲ್ಸಮ್ಮ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ಪ್ರಾಂಶುಪಾಲರಾದ ಆಶಾ, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಕಾರ್ಯದರ್ಶಿ ಎಂ.ಜೆ.ಸುಮಂತ್ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.