ಸಾರಾಂಶ
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಮಾನವಿಯತೆ ಉಳಿಸುವುದು ಪ್ರತಿಯೊಬ್ಬರ ಮೊದಲ ಕರ್ತವ್ಯವಾಗಿದ್ದು ಈ ಮೂಲಕ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ ಹಾಸನ, ಕೊಡಗು ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೂಕು ಘಟಕ , ಬಿಜಿಎಸ್ ಸೇವಾ ಸಂಘ ಕಳಲೆ ಕೂಡಿಗೆ, ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನಡೆದ ಯುಪಿಎಸ್ಸಿ ಪರೀಕ್ಷೆ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರದ ಯುವವಿಕಾಸನ-25 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಲಿಕೆಯ ದಾಹ ಇಲ್ಲದಿದ್ದರೆ ಗುರಿ ಮುಟ್ಟಲು ಸಾಧ್ಯವಾಗದು ಜ್ಞಾನ ಮತ್ತು ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಮಾರ್ಗದರ್ಶನ ನೀಡುವುದು ಶಿಕ್ಷಕನ ಕರ್ತವ್ಯ:
ವಿದ್ಯಾರ್ಥಿಗಳು ತಮ್ಮಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಮತ್ತು ನಿರ್ಭಯತೆ ಈ ಮಹತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಇದರ ಜೊತೆಯಲ್ಲಿ ಬುದ್ಧಿ, ಮನಸು, ಹೃದಯವಂತಿಕೆ, ಕರ್ಮ ಇವೆಲ್ಲಾವನ್ನು ಸದ್ಬಳಕೆ ಮಾಡಿದರೆ ವ್ಯಕ್ತಿ ತನ್ನ ಜೀವನವನ್ನು ಸ್ವಾಭಿಮಾನದಿಂದ ರೂಪಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು. ವಿದ್ಯಾರ್ಥಿಗಳ ಕೊರತೆಗಳನ್ನು ಗುರುತಿಸಿ ಮಾರ್ಗದರ್ಶನ ನೀಡುವುದು ಶಿಕ್ಷಕನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಅಪಮಾನ ಅವಮಾನ ಬಂದರೂ ಮರೆಯುವಂತೆ ಛಲದಿಂದ ಬದುಕುವ ಕಲೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವಂತೆ ಸಲಹೆ ನೀಡಿದರು.ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಡಾ.ಬೋರಲಿಂಗಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ಅಳುಕು ಅಂಜಿಕೆಯಿಂದ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ಪರಿಶ್ರಮ ಛಲದ ಸ್ವಭಾವವನ್ನು ಬೆಳೆಸಿಕೊಂಡರೆ ಸಾಧನೆ ಮಾಡಬಹುದು ಎಂದರು. ಕೇವಲ ಶಿಕ್ಷಣ ಪಡೆದುಕೊಂಡರೆ ಸಾಕಾಗುವುದಿಲ್ಲ ಇದರ ಜೊತೆಯಲ್ಲಿ ಕೌಶಲ್ಯಾಶಕ್ತಿಯನ್ನು ಅಭಿವೃದ್ಧಿ ಪಡಿಸಿದರೆ ಮಾತ್ರ ಉತ್ತಮ ಹುದ್ದೆಯನ್ನು ಅಲಂಕರಿಸಬಹುದು. ಪದವಿ ಪಡೆದ ವಿದ್ಯಾರ್ಥಿಗಳು ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅವಕಾಶ ಇದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದಿನ ಪತ್ರಿಕೆಗಳನ್ನು ಓದುವುದು, ಸಾಮಾನ್ಯ ಜ್ಞಾನದ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಪರೀಕ್ಷೆ ಎದುರಿಸಲು ಉಪಯೋಗವಾಗುತ್ತದೆ ಎಂದರು.
ಪೂರ್ಣ ಜ್ಞಾನದಿಂದ ಸಮಾಜ, ರಾಷ್ಟ್ರ ಸದೃಢ:ದಿವ್ಯಸಾನಿಧ್ಯವಹಿಸಿದ್ದ ಆದಿಚುಂಚನಗಿರಿ ಶಾಖಾ ಮಠದ ಹಾಸನ ಮತ್ತು ಕೊಡಗು ಜಿಲ್ಲೆಯ ಕಾರ್ಯದರ್ಶಿ ಶ್ರೀ ಶಂಭುನಾಥಸ್ವಾಮೀಜಿ ಮಾತನಾಡಿ, ಇಂದು ವಿಜ್ಞಾನದ ಹಲವು ವಿಭಾಗಗಳಿಂದ ವಿಜ್ಞಾನವು ಅಜ್ಞಾವಾಗುತ್ತಿದೆ. ಆದರೆ ಪೂರ್ಣ ಜ್ಞಾನದಿಂದ ಸಮಾಜ ರಾಷ್ಟ್ರ ಸದೃಢಗೊಳ್ಳುತ್ತದೆ. ಗ್ರಾಮೀಣ ಭಾಗದ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದ ಅವಶ್ಯಕತೆ ಇರುವ ನಿಟ್ಟಿನಲ್ಲಿ ಈ ಭಾಗದಲ್ಲಿ ಪತ್ರಕರ್ತರ ಸಂಘ ಮತ್ತು ಮಠದ ಭಕ್ತರ ಸಹಕಾರದಿಂದ ಮಾಹಿತಿ ಕಾರ್ಯಾಗಾರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಡಗು ಪತ್ರಕರ್ತ ಸ ಸಂಘದ ಸ್ಥಾಪಕ ಅಧ್ಯಕ್ಷ ಮರುಳಿಧರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಇಂಡಿಯನ್ ಐಎಎಸ್ ಅಕಾಡೆಮಿ ಸಂಸ್ಥಾಪಕ, ಸಿಇಒ ಪಿ.ಸಿ.ಶ್ರೀನಿವಾಸ್, ಪುನಿತ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್ , ಉದ್ಯಮಿ ಗಿರೀಶ್ ಮಲ್ಲಪ್ಪ ಮಾತನಾಡಿದರು. ಕಳಲೆ ಕೂಡಿಗೆಯ ಬಿಜಿಎಸ್ ಸೇವಾ ಸಂಘದ ಉಪಾಧ್ಯಕ್ಷ ಕಳಲೆ ಕೃಷ್ಣೇಗೌಡ, ಜಗನ್ಪಾಲ್, ಪುಟ್ಟೇಗೌಡ ಮುಂತಾದವರು ಹಾಜರಿದ್ದರು. ಕಾರ್ಯಾಗಾರದಲ್ಲಿ ತಾಲೂಕಿನ ವಿವಿಧ ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.