ಸಾರಾಂಶ
ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಣೆದೊಂದಿಗೆ ಗೆಲುವಿನ ನಗೆ ಬೀರಿದರು.
ಕನ್ನಡಪ್ರಭ ವಾರ್ತೆ ಹುಣಸಗಿ
ಸುರಪುರ ಮತಕ್ಷೇತ್ರದ ಉಪಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಮಹಾಂತಸ್ವಾಮಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಗುಲಾಲು ಎರಚಿಕೊಂಡು ವಿಜಯೋತ್ಸವ ಆಚರಿಸಿದರು.ಈ ವೇಳೆ ಕಾಂಗ್ರೆಸ್ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಜ್ಜನ್ ಮಾತನಾಡಿ, ದಿ. ರಾಜಾ ವೆಂಕಟಪ್ಪ ನಾಯಕ ಅವರ ಆಡಳಿತದಲ್ಲಿನ ಅಭಿವೃದ್ಧಿ ಕಾರ್ಯ ಹಾಗೂ ಯುವ ನಾಯಕತ್ವ, ಕಾಂಗ್ರೆಸ್ ಸರಕಾರದ ಜಾರಿಗೆ ತಂದ ಯೋಜನೆಗಳ ಮೆಚ್ಚಿ ಜನಾಶೀರ್ವಾದ ಮಾಡಿದ್ದಾರೆ. ಹೀಗಾಗಿ ಜಿ. ಕುಮಾರ ನಾಯಕ ಅವರು ಲೋಕಾಸಭೆಯಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರದಲ್ಲಿಯೂ ಅಧಿಕಾರ ಹಿಡಿಯುವಲ್ಲಿ ಜನಮನ್ನಣೆ ನೀಡಿದ್ದಾರೆ ಎಂದರು.ಮುಂದಿನ ದಿನಗಳಲ್ಲಿ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸುರಪುರ ಮತಕ್ಷೇತ್ರದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸ ಮತ್ತು ಜನಪರ, ರೈತಪರ ಸೇವೆಯೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಸಿದ್ದಣ್ಣ ಸಾಹುಕಾರ ಮಲಗಲದಿನ್ನಿ, ಪರಿಶಿಷ್ಟ ಪಂಗಡ ಸದಸ್ಯರಾದ ಶರಣು ಸಾಹುಕಾರ ದಂಡಿನ್, ಸಿದ್ದು ಸಾಹುಕಾರ ಮುದಗಲ್, ಬಸವರಾಜ ಬಳಿ, ಶಾಂತಪ್ಪ ಬಾಕ್ಲಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.