ತಾಲೂಕಿನ ಜೋಡಿ ಕೃಷ್ಣಾಪುರ ಗ್ರಾಮದ ಉಮೇಶ ಎಂಬಾತನೇ ಈ ಕೃತ್ಯ ಎಸಗಿದ್ದು, ಗಂಭೀರವಾಗಿ ಗಾಯಗೊಂಡಿರುವ ರೋಜಾ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆಯ ವಿವರ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಮೇಲೆಯೇ ಪತಿ ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ರಕ್ತದ ಮಡುವಿನಲ್ಲಿ ಬಿಟ್ಟು ಪರಾರಿಯಾಗಿರುವ ಭೀಕರ ಘಟನೆ ತಾಲೂಕಿನ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದ್ದು, ಮಹಿಳೆ ಸಾವು- ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸಾಂಸಾರಿಕ ಕಲಹ, ವರದಕ್ಷಿಣೆ ಬೇಡಿಕೆ ಹಾಗೂ ಪತ್ನಿಯ ಮೇಲಿನ ಅನುಮಾನವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗುತ್ತಿದೆ.

ತಾಲೂಕಿನ ಜೋಡಿ ಕೃಷ್ಣಾಪುರ ಗ್ರಾಮದ ಉಮೇಶ ಎಂಬಾತನೇ ಈ ಕೃತ್ಯ ಎಸಗಿದ್ದು, ಗಂಭೀರವಾಗಿ ಗಾಯಗೊಂಡಿರುವ ರೋಜಾ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆಯ ವಿವರ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ನಗರದ ಹೊರವಲಯದ ಗವೇನಹಳ್ಳಿ ನಿವಾಸಿಗಳಾದ ರೋಜಾ ಹಾಗೂ ಉಮೇಶ ಸುಮಾರು 8 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು, ಆರಂಭದಲ್ಲಿ ದಂಪತಿಯ ಜೀವನ ಸುಖಕರವಾಗಿಯೇ ಸಾಗುತ್ತಿತ್ತು. ಅವರಿಗೆ ಒಂದು ಗಂಡು ಮಗುವೂ ಇದೆ. ಆದರೆ, ಕಳೆದ ನಾಲ್ಕು ವರ್ಷಗಳಿಂದ ದಾಂಪತ್ಯದಲ್ಲಿ ಬಿರುಕು ಮೂಡಿತ್ತು ಎಂದು ತಿಳಿದುಬಂದಿದೆ.

ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಉಮೇಶ, ಮದುವೆ ಸಂದರ್ಭದಲ್ಲಿ ನಿಮ್ಮ ಮನೆಯವರು ಏನನ್ನೂ ಕೊಟ್ಟಿಲ್ಲ ಎಂದು ಹೇಳಿ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ, ಅಲ್ಲದೆ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಆಗಾಗ ಜಗಳವಾಡುತ್ತಿದ್ದ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸಣ್ಣಪುಟ್ಟ ಕಾರಣಕ್ಕೂ ಗಲಾಟೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರೋಜಾ ಮಾನಸಿಕವಾಗಿ ಬೇಸತ್ತು 1 ವರ್ಷದ ಹಿಂದೆ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದಳು, ಬಳಿಕ ಜೀವನೋಪಾಯಕ್ಕಾಗಿ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಪತ್ನಿಯೊಂದಿಗೆ ಮಾತನಾಡಬೇಕೆಂದು ಹೇಳಿ ಫ್ಯಾಕ್ಟರಿ ಬಳಿ ಬಂದ ಉಮೇಶ, ರೋಜಾಳನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಉಮೇಶ, ರೋಜಾಳ ತಲೆ, ಎದೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಮನಬಂದಂತೆ ಚಾಕುವಿನಿಂದ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ರೋಜಾ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದಿದೆ.