ಕನ್ನಡಪ್ರಭ ವಾರ್ತೆ ಬೆಂಗಳೂರು

ವೈಯಕ್ತಿಕ ಕಾರಣ ಹಿನ್ನಲೆಯಲ್ಲಿ ಕೂಲಿ ಕಾರ್ಮಿಕನೊಬ್ಬ ತನ್ನ ಪತ್ನಿಯನ್ನು ಕೊಂದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೇರುಪಾಳ್ಯದ ನಿವಾಸಿ ರೀಮಾ ಕುಮಾರ್ (20) ಕೊಲೆಯಾದ ದುರ್ದೈವಿ. ಈ ಹತ್ಯೆ ಬಳಿಕ ತಪ್ಪಿಸಿಕೊಂಡಿರುವ ಮೃತಳ ಧೀರಜ್ ಕುಮಾರ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೃತಳ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಪೊಲೀಸರಿಗೆ ಬುಧವಾರ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದಾಗ ಕೊಳತೆ ಸ್ಥಿತಿಯಲ್ಲಿ ರೀಮಾಳ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೂಲಿ ಅರಸಿಕೊಂಡು ನಗರಕ್ಕೆ ಬಿಹಾರ ಮೂಲದ ರೀಮಾ ಹಾಗೂ ಆಕೆಯ ಪತಿ ಧೀರಜ್ ಬಂದಿದ್ದರು. ಬಳಿಕ ನಗರ ಹೊರವಲಯದ ಗೇರುಪಾಳ್ಯದಲ್ಲಿ ನೆಲೆಸಿದ್ದ ದಂಪತಿ, ಅಲ್ಲಿ ಸಮೀಪದ ಕೈಗಾರಿಕೆಯಲ್ಲಿ ಸತಿ-ಪತಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ವಿಷಯಗಳಿಗೆ ರೀಮಾ ಹಾಗೂ ಧೀರಜ್ ಮಧ್ಯೆ ಮನಸ್ತಾಪವಾಗಿದೆ. ಈ ಹಿನ್ನಲೆಯಲ್ಲಿ ಪತ್ನಿಯನ್ನು ಕೊಂದು ಆತ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.