ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ

| Published : Dec 10 2024, 01:31 AM IST

ಸಾರಾಂಶ

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್‍ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್‍ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರ್‍ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು. ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದು ಹೇಳಿದರು.

ಈಗ ಕಬ್ಬಿನ ಸೀಸನ್‌ (ಋತುಮಾನ) ಆಗಿರುವುದರಿಂದ ಟ್ರ್ಯಾಕ್ಟರ್‌ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಎಂದು ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದರು. ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆಗೆ ಮಾತನಾಡಿದ್ದೇನೆ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರೆ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು. ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿರುವೆ. ನಾನು ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರುತ್ತೇವೆ ಎಂದು ಭರವಸೆ ನೀಡಿದರು.