ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ

| Published : Mar 20 2024, 01:48 AM IST / Updated: Mar 20 2024, 11:51 AM IST

HD Kumaraswamy
ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ಮುಖಂಡರ ಭಾವನೆಗಳನ್ನಷ್ಟೇ ಹೇಳಿದ್ದೇನೆ ಅಷ್ಟೇ ಎಂದು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರು.

ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿದ್ದೇನೆ. 

ಹೃದಯ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಬರುವವರೆಗೆ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂಬುದಾಗಿ ಬಯಸುತ್ತೇನೆ ಎಂದು ತಿಳಿಸಿದರು.

ಮಂಡ್ಯ ಸ್ಪರ್ಧೆ ಬಗ್ಗೆ ತಿಳಿಸುತ್ತೇನೆ: ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ.‌ ನಮ್ಮ ಮೂರು ಕ್ಷೇತ್ರಗಳಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುವಂತೆ ಹೇಳಿದ್ದೇನೆ. 

ಯಾರೂ ಸಮಯ ವ್ಯರ್ಥ ಮಾಡಬಾರದು. ಆಸ್ಪತ್ರೆಯಿಂದ ಬಂದ ಕೂಡಲೇ ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ. 

ನನ್ನ ಪ್ರಕಾರ ಮಂಡ್ಯ ಸೇರಿ ನಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರೇ ಅಭ್ಯರ್ಥಿಗಳು. ಪಕ್ಷವನ್ನು, ಕಾರ್ಯಕರ್ತರನ್ನು ಗೆಲ್ಲಿಸುವುದಕಾಗಿ ಎಲ್ಲರೂ ಒಮ್ಮತವಾಗಿ ಶ್ರಮಿಸಬೇಕು ಎಂದರು.

ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆಯಾಗಿದೆ. 

ಆಸ್ಪತ್ರೆಯಿಂದ ಬಂದ ಕೂಡಲೇ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ. ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ ಎಂದು ಹೇಳಿದರು.