ಗ್ರಾಪಂ ಸದಸ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಸುನಿಲಗೌಡ ಪಾಟೀಲ

| Published : Jun 17 2025, 03:27 AM IST

ಗ್ರಾಪಂ ಸದಸ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಸುನಿಲಗೌಡ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಅವಳಿ ಜಿಲ್ಲೆಯ 15 ಮತಕ್ಷೇತ್ರಗಳ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ವಿಧಾನ ಪರಿಷತ್ ನಲ್ಲಿ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಅವಳಿ ಜಿಲ್ಲೆಯ 15 ಮತಕ್ಷೇತ್ರಗಳ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ವಿಧಾನ ಪರಿಷತ್ ನಲ್ಲಿ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ಹೇಳಿದರು.

ಸಮೀಪದ ಕೋರ್ತಿ ಸಮುದಾಯ ಭವನದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿ,ಗ್ರಾಮ ಪಂಚಾಯತಿಗಳ ಸಹಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ನೇತೃತ್ವದಲ್ಲಿ ಆಯೋಜಿಸಿದ್ದ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಂಚೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಕೇವಲ ₹500 ಇತ್ತು. ನಾನು ವಿಧಾನ ಪರಿಷತ್‌ ಸದಸ್ಯನಾದ ಮೇಲೆ ಅಧಿವೇಶನದಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಳ ಕುರಿತು ಹೋರಾಟ ಮಾಡಿದ ಫಲವಾಗಿ ಈಗ ಗ್ರಾಪಂ ಅಧ್ಯಕ್ಷರು ₹6000, ಉಪಾಧ್ಯಕ್ಷರು ₹4000 ಹಾಗೂ ಸದಸ್ಯರು ₹2000 ಗೌರವಧನ ಪಡೆಯುತ್ತಿದ್ದಾರೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.

ಪ್ರತಿ ಗ್ರಾಮ ಪಂಚಾಯತಿಗೆ 100 ಮನೆ ಒದಗಿಸಲು ವಸತಿ ಸಚಿವ ಜಮೀರ್ ಅಹಮ್ಮದ್‌ ಅವರಿಗೆ ಮನವಿ ಮಾಡಿದ್ದೆ. ಆದರೆ ಅವರು 100 ಮನೆ ಕೊಡಲು ಸಾಧ್ಯವಾಗಲ್ಲ ಎಂದಿದ್ದರು. ಕನಿಷ್ಠ 50 ಮನೆಗಳನ್ನಾದರೂ ಕೊಡಿ ಎಂದಿದ್ದೆ. ಇಲ್ಲಿಯವರೆಗೆ ಒಂದು ಮನೆಯನ್ನೂ ಕೊಟ್ಟಿಲ್ಲ. ಬರುವ ಅಧಿವೇಶನದಲ್ಲಿವೀ ಕುರಿತು ಪ್ರಸ್ತಾಪ ಮಾಡುತ್ತೇನೆ ಎಂದ ಅವರು, ಸ್ಥಳೀಯ ಸಂಸ್ಥೆಯ ಸದಸ್ಯರು ಲಿಖಿತವಾಗಿ ಮನವಿ ನೀಡಿದರೆ, ನನ್ನ ವ್ಯಾಪ್ತಿಗೆ ಬರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವೆ ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತಿ ಸದಸ್ಯರು ಭಾಗವಹಿಸಿ ವಿವಿಧ ಸಮಸ್ಯೆಗಳ ಕುರಿತು ಲಿಖಿತ ರೂಪದಲ್ಲಿ ಮನವಿ ನೀಡಿದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ, ಪಟ್ಟಣ ಪಂಚಾಯತಿ ಅಧ್ಯಕ್ಷ ಮುತ್ತು ಬೊರ್ಜಿ, ಮುಖ್ಯಾಧಿಕಾರಿ ದೇವೀಂದ್ರ ಧನಪಾಲ, ನಾಗರಾಜ ಹದ್ಲಿ ಇದ್ದರು.