ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಆರೋಗ್ಯ ಸಚಿವನಾಗಿದ್ದಾಗ ಅಗತ್ಯ ಸಂಪನ್ಮೂಲ ಕಲ್ಪಿಸಿದ್ದೇನೆ. ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಮನವರಿಕೆ ಮಾಡುವೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ಸರ್ಕಾರ ಘೋಷಿಸಿರುವ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಗರದ ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ನಡೆದ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು. ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಬಂಥನಾಳ ಶಿವಯೋಗಿಗಳ ಹೆಸರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಕನಸಿದೆ. ಹೊಸದಾಗಿ ಸರ್ಕಾರಿ ಕಾಲೇಜು ಸ್ಥಾಪನೆಗೆ ಕನಿಷ್ಟ ₹500 ಕೋಟಿ ಬೇಕು. ಆದರೆ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಸಚಿವನಾಗಿದ್ದಾಗ ಅಗತ್ಯ ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಸರ್ಕಾರ ಆರಂಭದಲ್ಲಿ ₹50 ಕೋಟಿ ಯಂತೆ ಕೇವಲ ₹ 100 ಕೋಟಿ ಅನುದಾನ ನೀಡಿದರೂ ಸಾಕು ಎಂದರು.
2013ರಿಂದಲೂ ನಾನು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಪ್ರಯತ್ನಿಸುತ್ತಿದ್ದೇನೆ. ಅಂದಿನ ಸಿಎಂಗಳಾದ ಸಿದ್ಧರಾಮಯ್ಯ, ಬಸವರಾಜ ಬೊಮ್ಮಾಯಿಯವರು ನನಗೆ ಸದನದಲ್ಲೂ ಭರವಸೆ ನೀಡಿದ್ದರು. ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್, 150 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಿಎಸ್ಸಿ ನರ್ಸಿಂಗ್, ಡಿಪ್ಲೊಮಾ ನರ್ಸಿಂಗ್ ಕಾಲೇಜುಗಳು, 150 ಎಕರೆ ವಿಸ್ತೀರ್ಣದ ಸರ್ಕಾರಿ ಆಸ್ಪತ್ರೆ ಇವೆ. ನಾನು ಬಸವವನಬಾಗೇವಾಡಿ ಕ್ಷೇತ್ರದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಿದ ಬಳಿಕವೇ ಜಿಲ್ಲಾ ಕೇಂದ್ರದಲ್ಲಿ ಪದವಿ ಕಾಲೇಜು ಸ್ಥಾಪನೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರವಲ್ಲ, ಸರ್ಕಾರಿ ಎಂಜಿನಿಯರಿಂಗ್ ಹಾಗೂ ಕಾನೂನು ಕಾಲೇಜುಗಳಂಥ ಶೈಕ್ಷಣಿಕ ಸೌಲಭ್ಯಗಳೂ ಇಲ್ಲವಾಗಿವೆ ಎಂದರು.-------------
ಕೋಟ್ಜಿಲ್ಲೆಗೆ ಏಮ್ಸ್ ಕಾಲೇಜು ಮಂಜೂರು ಮಾಡಿಸಿದರೆ ಸಂಸದ ರಮೇಶ ಜಿಗಜಿಣಗಿ ಅವರನ್ನು ಸನ್ಮಾನಿಸುತ್ತೇನೆ. ನಾನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಸಂಸದ ಜಿಗಜಿಣಗಿ, ಜಿಲ್ಲೆಯ ಸಚಿವರು, ಶಾಸಕರು ಪಕ್ಷಾತೀತವಾಗಿ ಏಮ್ಸ್ ಕಾಲೇಜಿಗೆ ಪ್ರಯತ್ನ ಮಾಡಬೇಕು. ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಅನುಷ್ಠಾನ ವಿಜಯಪುರ ಜಿಲ್ಲೆಗೆ ಮಾತ್ರ ಏಕೆ ಎಂಬುದು ನನಗೂ ಅರ್ಥವಾಗುತ್ತಿಲ್ಲ.
ಶಿವಾನಂದ ಪಾಟೀಲ, ಕೃಷಿ ಮಾರುಕಟ್ಟೆ ಸಚಿವಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಹೋರಾಟ ಸಮಿತಿಯ ಡಾ.ಗೋಪಾಲ ದಾಬಡೆ, ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಸಿದ್ಧಲಿಂಗ ಬಾಗೇವಾಡಿ, ಲಕ್ಷ್ಮಣ ಕಂಬಾಗಿ, ಭೋಗೇಶ ಸೋಲಾಪುರ, ಮಲ್ಲಿಕಾರ್ಜುನ ಕೆಂಗನಾಳ, ಭರತಕುಮಾರ.ಎಚ್.ಟಿ, ಸುರೇಶ ಬಿಜಾಪುರ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ.ಎಚ್.ಟಿ, ಕಾವೇರಿ ರಜಪೂತ, ಗೀತಾ.ಹೆಚ್, ಶಿವಬಾಳಮ್ಮ ಕೊಂಡಗೂಳಿ, ಸಂಜು ಕಂಬಾಗಿ ಸೇರಿದಂತೆ ಹಲವರಿದ್ದರು.