ದಾಬಸ್ಪೇಟೆ: ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯ ಪಾಲನಹಳ್ಳಿ ಮಠಕ್ಕೆ ಪೌರಾಡಳಿತ ಖಾತೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಭೇಟಿ ನೀಡಿ ಪಾಲನಹಳ್ಳಿ ಮಠದ ಡಾ.ಶ್ರೀ ಸಿದ್ದರಾಜು ಸ್ವಾಮೀಜಿಯವರ ಆಶೀರ್ವಾದ ಪಡೆದರು
ದಾಬಸ್ಪೇಟೆ: ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯ ಪಾಲನಹಳ್ಳಿ ಮಠಕ್ಕೆ ಪೌರಾಡಳಿತ ಖಾತೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಭೇಟಿ ನೀಡಿ ಪಾಲನಹಳ್ಳಿ ಮಠದ ಡಾ.ಶ್ರೀ ಸಿದ್ದರಾಜು ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಅವರು, ಪಾಲನಹಳ್ಳಿ ಮಠಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಮಠದ ಪ್ರತಿಯೊಂದು ಕಾರ್ಯಕ್ರಮದಲ್ಲೂ ಶ್ರೀಮಠದ ಶಿಷ್ಯನಾಗಿ ಭಾಗವಹಿಸುತ್ತಿದ್ದೇನೆ. ಪೂಜ್ಯರಿಗೂ ಸಹ ನನ್ನ ಮೇಲೆ ಪ್ರೀತಿಯಿದೆ. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮಠಗಳ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.ಸಿದ್ದಗಂಗಾ ಮಠಕ್ಕೆ ಭೇಟಿ: ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಹಾಗೂ ಶಿವಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದ ಬಗ್ಗೆ ಸುಮಾರು ವರ್ಷಗಳಿಂದ ಇರುವ ಸಮಸ್ಯೆಯನ್ನು ಬಗೆಹರಿಸಿ, ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರೈತರಿಗೆ ಸ್ಪಂದಿಸುವಂತಾಗಲಿ ಹಾಗೂ ತಾಲೂಕಿನ ಪಾಲ್ಕುರಿಕೆ ಸೋಮನಾಥ ಹಾಗೂ ಸರ್ವಶೀಲೆ ಚೆನ್ನಮ್ಮನ ಗದ್ದುಗೆಯಿರುವ ಪವಿತ್ರ ಕಲ್ಯಾ ಬೆಟ್ಟವನ್ನು ಅಭಿವೃದ್ಧಿಪಡಿಸುವಂತೆ ಶ್ರೀಗಳು ಆಶೀವರ್ದಿಸಿದ್ದಾರೆ ಎಂದರು.
ಮುಖ್ಯಮಂತ್ರಿಯಿಂದಲೇ ಲೋಕಾರ್ಪಣೆ:ಕರ್ನಾಟಕ ರತ್ನ, ಸಿದ್ದಗಂಗಾ ಮಠದ ಲಿಂ. ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ನಮ್ಮ ಮಾಗಡಿ ತಾಲೂಕಿನವರಾಗಿರುವುದು ಪ್ರತಿಯೊಬ್ಬರಿಗೂ ಹೆಮ್ಮೆಯ ಸಂಗತಿ. ಅವರ ಜನ್ಮಸ್ಥಳವಾದ ವೀರಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ 111 ಅಡಿ ಎತ್ತರದ ಶ್ರೀಗಳ ಬೃಹತ್ ಪ್ರತಿಮೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಇಂಜಿನಿಯರ್ ಹಾಗೂ ಗುತ್ತಿಗೆದಾರರ ಸಭೆ ಕರೆದು ಸೂಚಿಸಲಾಗಿದೆ. ಜತೆಗೆ ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರೊಂದಿಗೂ ಚರ್ಚಿಸಿದ್ದೇನೆ. ಮುಂದಿನ ವಾರದಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸ್ಥಳಕ್ಕೆ ಭೇಟಿ ನೀಡಲಿದ್ದು, ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ ನಮ್ಮ ಸರ್ಕಾರದ ಅವಧಿಯಲ್ಲಿ ಸರ್ಕಾರದ ಅವಧಿಯಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದಲೇ ಲೋಕಾರ್ಪಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ನೀರಾವರಿ ಅಭಿವೃದ್ಧಿಗೆ ಆದ್ಯತೆ ನೀಡಿ:ಪಾಲನಹಳ್ಳಿ ಮಠದ ಡಾ.ಶ್ರೀ ಸಿದ್ದರಾಜು ಸ್ವಾಮೀಜಿ ಮಾತನಾಡಿ, ಐದು ಬಾರಿ ಶಾಸಕರಾಗಿ ಕೆಲಸ ಮಾಡಿರುವ ಮಾಗಡಿ ಶಾಸಕರಿಗೆ ಸಚಿವ ಸ್ಥಾನ ದೊರೆತಿರುವುದು ಮಾಗಡಿ ಕ್ಷೇತ್ರದ ಜನತೆಯಲ್ಲಿ ಸಂತಸ ಮನೆ ಮಾಡಿದೆ. ಸಣ್ಣ ನೀರಾವರಿ ಖಾತೆ ಸಚಿವರಾಗಿದ್ದು, ನೀರಾವರಿ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಕ್ಷೇತ್ರದ ಅಭಿವೃದ್ದಿಯ ಕಡೆಗೂ ಗಮನಹರಿಸಿ ಉತ್ತಮ ಅಭಿವೃದ್ದಿಪಥದತ್ತ ಕ್ಷೇತ್ರವನ್ನು ಮಾಡಲಿ. ನಮ್ಮ ಮಠದ ಆಶೀರ್ವಾದ ಸದಾ ಅವರ ಮೇಲಿರುತ್ತದೆ ಎಂದು ಆಶೀರ್ವದಿಸಿದರು.
ಉನ್ನತ ಸ್ಥಾನ ಅಲಂಕರಿಸಲಿ: ಸರ್ಕಾರ ಹಾಗೂ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸಿ ರಾಜ್ಯದಲ್ಲೆಡೆ ಪ್ರವಾಸ ಮಾಡಿ ಜನ ಸೇವೆ ಮಾಡಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳ ನಡುವೆಯೂ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಕೆಲಸಗಳನ್ನು ಮಾಡಿಸಿಕೊಳ್ಳಬೇಕು. ಜನಪರ ಆಡಳಿತ ನೀಡಿ, ನೊಂದವರ ದನಿಯಾಗಿ ಲೋಕಕಲ್ಯಾಣದ ಕೆಲಸಗಳನ್ನು ದೊರೆತ ಅವಕಾಶವನ್ನು ಸದ್ಬಳಿಸಿಕೊಂಡು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ಅಲಕಂರಿಸುವಂತಾಗಲಿ ಎಂದು ಶ್ರೀಗಳು ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಮಠದ ಭಕ್ತರು, ಸಚಿವರ ಅಭಿಮಾನಿಗಳು ಉಪಸ್ಥಿತರಿದ್ದರು.
ಪೋಟೋ 3 :ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯ ಪಾಲನಹಳ್ಳಿ ಮಠಕ್ಕೆ ಪೌರಾಡಳಿತ ಖಾತೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಭೇಟಿ ನೀಡಿ ಡಾ.ಶ್ರೀ ಸಿದ್ದರಾಜು ಸ್ವಾಮೀಜಿಯವರ ಆಶೀರ್ವಾದ ಪಡೆದರು.