ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಲಾಗುವುದಿಲ್ಲ. ಮುಂಗಾರು ಮಳೆ ಕೈಕೊಟ್ಟು ಜಲಾಶಯಕ್ಕೆ ನೀರಿನ ಒಳ ಹರಿವು ಕೂಡ ಕಡಿಮೆಯಾಗಿದೆ. ಇನ್ನು ನೈಋತ್ಯ ಮಾನ್ಸೂನ್ ಮಳೆ ಪ್ರಾರಂಭವಾಗಿ ಕರ್ನಾಟಕದ ಕೆಳಭಾಗದ ತಮಿಳುನಾಡಿಗೆ ಮಳೆ ಆಗಮಿಸುವ ಸೂಚನೆಗಳಿದ್ದರೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡಿ ಎಂದು ಹೇಳುತ್ತಿರುವುದು ಯಾವ ನ್ಯಾಯ? ನಮ್ಮ ಕಾವೇರಿ ನೀರನ್ನು ನಮ್ಮಲ್ಲೇ ಉಳಿಸಿಕೊಳ್ಳಲು ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್‌ಗೆ ಹೋಗಿ, ರೈತ ಪರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ಶಾಸಕರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕೆಆರ್‌ಎಸ್ ಅಣೆಕಟ್ಟೆಯಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲು ನಾವು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ತಾಲೂಕಿನ ಮೇಳಾಪುರ ಹಾಗೂ ಮಹದೇವಪುರ ಗ್ರಾಮಗಳಲ್ಲಿ ಎಸ್ಸಿ- ಎಸ್ಟಿ ಯೋಜನೆಯ ಅನುದಾನದಲ್ಲಿ ತಲಾ ₹1 ಕೋಟಿ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಈಗಾಗಲೇ ಸಿಡಬ್ಲ್ಯೂಎಂಎ ಹಾಗೂ ಸಿಡಬ್ಲ್ಯೂಆರ್‌ಸಿ ಪ್ರಾಧಿಕಾರದ ಆದೇಶಗಳನ್ನು ಪಾಲಿಸಿ ಪ್ರತಿ ನಿತ್ಯ 12 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಹೇಳಿದೆ. ಅವರು ಹೇಳಿದಂತೆ ಕೇಳಲಾಗುವುದಿಲ್ಲ. ಇಲ್ಲಿ ನೀರು ಇಲ್ಲದಿದ್ದರೂ ಎಲ್ಲಿಂದ ನೀರು ಬಿಡುವುದು ಎಂದು ಪ್ರಶ್ನಿಸಿದರು.

ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಲಾಗುವುದಿಲ್ಲ. ಮುಂಗಾರು ಮಳೆ ಕೈಕೊಟ್ಟು ಜಲಾಶಯಕ್ಕೆ ನೀರಿನ ಒಳ ಹರಿವು ಕೂಡ ಕಡಿಮೆಯಾಗಿದೆ. ಇನ್ನು ನೈಋತ್ಯ ಮಾನ್ಸೂನ್ ಮಳೆ ಪ್ರಾರಂಭವಾಗಿ ಕರ್ನಾಟಕದ ಕೆಳಭಾಗದ ತಮಿಳುನಾಡಿಗೆ ಮಳೆ ಆಗಮಿಸುವ ಸೂಚನೆಗಳಿದ್ದರೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡಿ ಎಂದು ಹೇಳುತ್ತಿರುವುದು ಯಾವ ನ್ಯಾಯ? ನಮ್ಮ ಕಾವೇರಿ ನೀರನ್ನು ನಮ್ಮಲ್ಲೇ ಉಳಿಸಿಕೊಳ್ಳಲು ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್‌ಗೆ ಹೋಗಿ, ರೈತ ಪರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ಶಾಸಕರು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನರೇಟರ್ ಕೆಟ್ಟು ಡಯಾಲಿಸಿಸ್ ರೋಗಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾಧ್ಯಮದ ಮೂಲಕ ತಿಳಿದು ಬಂದಿದೆ. ಈ ಸಂಬಂಧ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ ಜನರೇಟರ್ ಸರಿ ಪಡಿಸಿ, ರೋಗಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳವಂತೆ ಸೂಚಿಸಿದ್ದೇನೆ. ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ವೈದ್ಯ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದರು.

ಈ ವೇಳೆ ಡಿಸಿಸಿ ಬ್ಯಾಂಕ್ ಮಾಜಿ ಸದಸ್ಯರಾದ ಚಲುವರಾಜು, ಬಸವರಾಜು, ತಾಪಂ ಮಾಜಿ ಸದಸ್ಯ ಕಾಳೇಗೌಡ, ಗ್ರಾಪಂ ಮಾಜಿ ಸದಸ್ಯ ಲಕ್ಷ್ಮಣ್ ಸೇರಿದಂತೆ ಇತರ ಮುಖಂಡರು, ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.