ನಾನು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆಯೇ ಹೊರೆತು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸ್ಪಷ್ಟಪಡಿಸಿದರು

ಕನ್ನಡಪ್ರಭ ವಾರ್ತೆ ತುರುವೇಕೆರೆ

ನಾನು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆಯೇ ಹೊರೆತು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸ್ಪಷ್ಟಪಡಿಸಿದರು.

ತಾಲೂಕಿನ ಮಲ್ಲಾಘಟ್ಟದ ದೇವಾಲಯದ ಹಿಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ಕೆಲವರು ನಾನು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತೇನೆ. ಡಿ.ಕೆ.ಶಿವಕುಮಾರ್ ಪಟ್ಟಿ ರೆಡಿ ಮಾಡಿದ್ದಾರೆ. ಅದರಲ್ಲಿ ಎಂ.ಟಿ.ಕೃಷ್ಣಪ್ಪ ಸಹ ಒಬ್ಬರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲಾ ಸುಳ್ಳು. ಕೆಟ್ಟು ಹೋಗಿರುವ ಕಾಂಗ್ರೆಸ್ ಗೆ ನಾನ್ಯಾಕೆ ಹೋಗಲಿ. ಬೇಕಾದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ವಿನಃ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಹೇಳಿದರು. ತಾಲೂಕಿನಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಆದಷ್ಟು ಬೇಗ ಕಟ್ಟಡ ಕಾಮಗಾರಿ ಸಂಪೂರ್ಣಗೊಳ್ಳಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಜೀವನಾಡಿಯಾಗಿದೆ. ಈಗ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ನೀರು ಬಿಡಲು ಮುಂದಾಗಿದ್ದಾರೆ. ಆದರೆ ಈ ಹಿಂದೆ ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿ ಸಚಿವ ಸಂಪುಟದಲ್ಲೇ ನಿರ್ಣಯಿಸಿದ್ದರು. ಇಂತಹ ತಾಕತ್ತು ಡಿ.ಕೆ.ಶಿವಕುಮಾರ್ ಗೆ ಇಲ್ಲ ಎಂದು ಎಂ.ಟಿ.ಕೃಷ್ಣಪ್ಪ ಮೂದಲಿಸಿದರು. ಸಭೆಯಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅರುಣಾ, ಪ್ರಾಂಶುಪಾಲ ಸತೀಶ್ ಜಮಾದಾರ್, ಮುಖಂಡರಾದ ಪುನಿತ್, ಶ್ರೀನಿವಾಸ್ ಗೌಡ, ಹೊಸಳ್ಳಿ ದೇವರಾಜ್, ಕಿರಣ್ ಕುಮಾರ್, ಬಿ.ಎಸ್.ದೇವರಾಜು, ಮೊರಸರಕೊಟ್ಟಿಗೆ ಕಾಂತರಾಜು, ಪಾಲಣ್ಣ, ವಿಜಯ ಕುಮಾರ್, ಪುಟ್ಟೇಗೌಡ, ಮಂಗೀಕುಪ್ಪೆ ಬಸವರಾಜು, ಹಾವಾಳ ಕೃಷ್ಣ, ಮಾಳೆ ದೇವರಾಜು, ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.