ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ನವದೆಹಲಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್ ಕುರಿತು ಪ್ರತಿಕ್ರಿಯಿಸಿ, ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.
ಪೊಲೀಸರು ನೀಡಿರುವ ನೋಟಿಸ್ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ, ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, "ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡುತ್ತೇನೆ. ಅದರಂತೆ ಸುರ್ಜೇವಾಲ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದೇನೆ. ಭಾನುವಾರ ಇಂದಿರಾ ಭವನದಲ್ಲಿ ನಡೆದ ಭೋಜನಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೇನೆ. ಖರ್ಗೆ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇನೆ ಎಂದರು.
ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ-ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ಹೇಳಿದರು.