ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ, ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ, ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮನ್ವಯ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 2563 ಅಂಗನವಾಡಿ ಕೇಂದ್ರಗಳಿದ್ದು 2065 ಸ್ವಂತ ಕಟ್ಟಡದಲ್ಲಿ, 106 ಶಾಲಾ ಕಟ್ಟಡದಲ್ಲಿ, 96 ಇತರೆ ಕಟ್ಟಡದಲ್ಲಿ ಮತ್ತು 296 ಬಾಡಿಗೆ ಕಟ್ಟಡದಲ್ಲಿವೆ. ನಗರದಲ್ಲಿ 180 ಮತ್ತು ಗ್ರಾಮೀಣ ಭಾಗದಲ್ಲಿ 70 ನಿವೇಶನಗಳ ಅವಶ್ಯಕತೆ ಇದ್ದು, ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ವಹಿಸಬೇಕು. ಶಿವಮೊಗ್ಗ ನಗರದಲ್ಲಿ ಆದ್ಯತೆ ಮೇಲೆ ನಿವೇಶನ ಗುರುತಿಸುವ ಕೆಲಸವಾಗಬೇಕು ಎಂದು ಸಿಡಿಪಿಒಗಳಿಗೆ ಸೂಚಿಸಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006 ರಡಿ ಕಳೆದ ತ್ರೈಮಾಸಿಕದಲ್ಲಿ 83 ಪ್ರಕರಣ ದಾಖಲಾಗಿದ್ದು ಹಿಂದಿನ ಬಾಕಿ ಸೇರಿದಂತೆ 123 ಪ್ರಕರಣಗಳ ಪೈಕಿ 61 ಇತ್ಯರ್ಥಗೊಂಡಿವೆ. ಆಪ್ತಸಮಾಲೋಚನೆ ಮತ್ತಿತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಸಂತ್ರಸ್ತರಿಗೆ ನೀಡಬೇಕು ಎಂದು ತಿಳಿಸಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಖಿ ಒನ್ ಸ್ಟಾಪ್ ಸೆಂಟರ್‌ನಡಿ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ತಾತ್ಕಾಲಿಕ ಆಶ್ರಯ ವ್ಯವಸ್ಥೆ ನೀಡಲಾಗುತ್ತದೆ. ಪ್ರಸ್ತುತ 177 ಪ್ರಕರಣಗಳಿದ್ದು ಕೇಂದ್ರದಲ್ಲಿ ನೀಡಬೇಕಾದ ಸೇವೆಗಳನ್ನು ಸಕಾಲದಲ್ಲಿ ಒದಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ತಿಳಿಸಿದರು.

ರಾಜ್ಯ ಮಹಿಳಾ ನಿಲಯದಲ್ಲಿ ಪ್ರಸ್ತುತ 59 ಮಾನಸಿಕ ಅಸ್ವಸ್ಥ ಮತ್ತು 14 ಬುದ್ದಿಮಾಂದ್ಯ ನಿವಾಸಿ ಒಟ್ಟು 73 ನಿವಾಸಿಗಳಿದ್ದು ಅವರಿಗೆ ಆರೈಕೆ, ಆಹಾರ, ಸಮಾಲೋಚನೆ, ವೈದ್ಯಕೀಯ ನೆರವಿನೊಂದಿಗೆ ಕೌಶಲ್ಯ ತರಬೇತಿಯನ್ನು ಸಮರ್ಪಕವಾಗಿ ನೀಡುವಂತೆ ಸೂಚಿಸಿದರು.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಗುರುತಿಸಿ, ಪುನರ್ವಸತಿ ನೀಡುವಂತೆ ಸೂಚಿಸಿದ ಅವರು ಈ ಹಿಂದೆ 24 ಮಾಜಿ ದೇವದಾಸಿಯರು ಇದ್ದು 6 ಜನ ಮರಣ ಹೊಂದಿರುತ್ತಾರೆ. ಪ್ರಸ್ತುತ 18 ಮಾಜಿ ದೇವದಾಸಿಯರಿಗೆ ಸೌಲಭ್ಯ ನೀಡಲಾಗುತ್ತಿದೆ, ಹೊಸ ಸಮೀಕ್ಷೆಗೆ 4 ಅರ್ಜಿಗಳು ಬಂದಿವೆ ಎಂದರು.

2025ರ ಅಕ್ಟೋಬರ್‌ನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಲಾಗಿದೆ. 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಜತೆಗೆ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಗೊಳಿಸಿ, ಈ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.

ಜಿಪಂ ಸಿಇಒ ಎನ್‌.ಹೇಮಂತ್ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಈ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಎನ್‌ಆರ್‌ಸಿಗಳಿಗೆ (ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ದಾಖಲಿಸಿ ಚಿಕಿತ್ಸೆ ನೀಡಬೇಕು. ಎನ್‌ಆರ್‌ಸಿಗಳಲ್ಲಿ ತೀವ್ರ ಅಪೌಷ್ಟಿಕ ಮಕ್ಕಳಿಗೆ 14 ದಿನಗಳ ಕಾಲ ನಿಗದಿತ ಪೌಷ್ಟಿಕ ಆಹಾರದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಸಿಪಿಒ ಮಂಜುನಾಥ್, ಸಿಡಬ್ಲ್ಯುಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಸಾಂತ್ವನ ಕೇಂದ್ರಗಳ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.