ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಲೋಕಸಭಾ ಚುನಾವಣೆಗೆ ನಾನು ಹಾಗೂ ಶ್ರೀರಾಮುಲು ಇಬ್ಬರೂ ಆಕಾಂಕ್ಷಿಗಳಾಗಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಗೆಲ್ಲಿಸಲು ನಾವಿಬ್ಬರೂ ಶ್ರಮಿಸುತ್ತೇವೆ. ಈ ಮೂಲಕ ನರೇಂದ್ರ ಮೋದಿ ಅವರ ಶಕ್ತಿಯನ್ನು ಬಲಪಡಿಸುತ್ತೇವೆ ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.ನಗರದ ಬಸವಭವನದಲ್ಲಿ ಜರುಗಿದ ಬಿಜೆಪಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು. ಪಕ್ಷದ ಹಿರಿಯ ನಾಯಕರ ಆಶಯದಂತೆ ಸಂಸದನಾಗಿ ಈ ಜಿಲ್ಲೆಯ ಪ್ರಗತಿಗೆ ಸಾಕಷ್ಟು ಶ್ರಮಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲೂ ನಾನು ಪಕ್ಷದ ಅಭ್ಯರ್ಥಿಯಾಗುವ ಆಕಾಂಕ್ಷಿಯಾಗಿರುವೆ. ಬಿ.ಶ್ರೀರಾಮುಲು ಅವರು ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ಬರುತ್ತಿದ್ದು, ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ. ನಮಗೆ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ಹೇಳಿದರಲ್ಲದೆ, ಸಂಸದರಾಗಿ ಜಿಲ್ಲೆಯ ಪ್ರಗತಿಗಾಗಿ ಕೈಗೊಂಡ ನಾನಾ ಕ್ರಮಗಳ ಕುರಿತು ವಿವರಿಸಿದರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಮಹಾನ್ ನಾಯಕರಾಗಿದ್ದಾರೆ ಎಂದು ಶ್ಲಾಘಿಸಿದರು.
ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಎಸ್ಟಿ ಸಮುದಾಯಕ್ಕೆ ಹೆಚ್ಚಿನ ಅನುದಾನ ತರಲಾಯಿತು. ಸಮುದಾಯಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ. ನನ್ನ ರಾಜಕೀಯ ಜೀವನ ಸೋಲಿನಿಂದ ಆರಂಭಗೊಂಡಿದ್ದು, ರಾಜಕೀಯ ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುತ್ತೇನೆ ಎಂದರು.ಸಂಸದ ವೈ. ದೇವೇಂದ್ರಪ್ಪ ಅವರು ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸುಮಾರು ₹35 ಕೋಟಿ ಅನುದಾನವನ್ನು ಜಿಲ್ಲೆಗೆ ತಂದಿದ್ದಾರೆ. ಬಳ್ಳಾರಿ ಜಿಲ್ಲೆ ಮತ್ತಷ್ಟೂ ಅಭಿವೃದ್ಧಿ ಕಾಣಬೇಕಾಗಿದೆ. ಜಿಲ್ಲೆಯ ಜನರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಚುನಾಯಿಸಬೇಕು ಎಂದು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಮಾತನಾಡಿ, ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲ ಸಮುದಾಯಗಳ ಪ್ರಗತಿಗೆ ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಕುರಿತು ಜನವರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಮೋಕಾ, ಪಕ್ಷದ ಮುಖಂಡರಾದ ಡಾ. ಮಹಿಪಾಲ್, ಮುರಹರಗೌಡ ಗೋನಾಳ್, ಓಬಳೇಶ, ಪಾಲಿಕೆ ಸದಸ್ಯ ಹನುಮಂತಪ್ಪ, ಎನ್.ರಾಮಕೃಷ್ಣ, ವಿಧಾನಪರಿಷತ್ ಸದಸ್ಯೆ ಹೇಮಲತಾ, ಬಂಗಾರು ಹನುಮಂತ, ಅಯ್ಯಪ್ಪ ಮೇಕಲ, ಸಿದ್ದಪ್ಪ, ಉಡೇದ ಸುರೇಶ್ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.