ಶಾಲೆಯಲ್ಲಿ, ಬೇರೆ ಸ್ಥಳಗಳಲ್ಲಿ ಮಕ್ಕಳಿಗೆ ಕಿರುಕುಳವಾದಲ್ಲಿ ತಿಳಿಸಿ-ಶೇಖರಗೌಡ

| Published : Jan 19 2025, 02:15 AM IST

ಸಾರಾಂಶ

ಮಕ್ಕಳು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅವರು ಹೇಳಿದರು.

ಹಾವೇರಿ: ಮಕ್ಕಳು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅವರು ಹೇಳಿದರು.ನಗರದ ಗೆಳೆಯರ ಬಳಗ ಮಣಿಬಾಯಿ ಲೋಡಾಯ ಸಭಾಭವನದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳಿಂದ ಅಹವಾಲು ಸ್ವೀಕಾರ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಅಥವಾ ಶಾಲೆಗೆ ಬರುವಾಗ ಅಥವಾ ಬೇರೆ ಸ್ಥಳಗಳಲ್ಲಿ ತಮಗೆ ಯಾವುದೇ ಕಿರುಕುಳ ಉಂಟಾದ ಮಾಹಿತಿ, ಬಾಲ್ಯ ವಿವಾಹವಾದ ಅಥವಾ ನಿಶ್ಚಯವಾದ ಕುರಿತು, 8 ಮತ್ತು 9ನೇ ತರಗತಿಯಲ್ಲಿ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಕೂಡಲೇ ಉಚಿತ ಮಕ್ಕಳ ಸಹಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಶಾಲೆಯಲ್ಲಿ ಸಲಹಾ ಪೆಟ್ಟಿಗೆ ಅಳವಡಿಕೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದು, ಸಲಹಾ ಪೆಟ್ಟಿಗೆ ಹಾಕಿದ ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವ ಕುರಿತು ಆಯಾ ಶಾಲಾ ಶಿಕ್ಷಕರೊಂದಿಗೆ ಮಾಹಿತಿ ಪಡೆದುಕೊಂಡರು. ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳಿಂದ ಸ್ವೀಕರಿಸಲಾದ ಅಹವಾಲು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮಕ್ಕಳಿಗೆ ತಿಳಿಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ ಬಹಳ ಮಹತ್ವದ ಪಾತ್ರವಹಿಸುತ್ತದೆ. ಹಾಗಾಗಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ಹಾಗೂ ಇತರೆ ಸಮಸ್ಯೆಗಳಿದ್ದರೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದು ಎಂದು ಸಲಹೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಅವರು, ಶಿಕ್ಷಕರು ಮಕ್ಕಳ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿ, ಆಯಾ ಶಾಲೆಗಳಲ್ಲಿ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಶಿಕ್ಷಕರು ಇತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಸ್ವಾಗತಿಸಿದರು.