ಆಲೂರು- ಬೇಲೂರು ರೈಲ್ವೆ ಯೋಜನೆಗೆ ಸಂಬಂಧಿಸಿದ ಎಲ್ಲಾ ಭಾಗೀದಾರ ಇಲಾಖೆಗಳು ಹಾಗೂ ಸಕ್ಷಮ ಅಧಿಕಾರಿಗಳ ತುರ್ತು ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ, ಪ್ರಸ್ತುತ ಮಾರುಕಟ್ಟೆ ಬೆಲೆ ಆಧರಿಸಿ ಭೂಮಿಯ ಮೌಲ್ಯ ನಿಗದಿಪಡಿಸಿ ಸಂತ್ರಸ್ತ ರೈತರಿಗೆ ಮೂರು ದಿನಗಳೊಳಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಡಳಿತ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಂತ್ರಸ್ತ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಅದರ ಸಂಪೂರ್ಣ ಹೊಣೆ ಜಿಲ್ಲಾಡಳಿತವೇ ಹೊರಬೇಕಾಗುತ್ತದೆ ಎಂದು ಆದಿಯೋಗಿ ಸದಾಶಿವಯ್ಯ ಎಚ್ಚರಿಕೆ ನೀಡಿದರು.
ಕನ್ನಡಪ್ರಭ ವಾರ್ತೆ ಹಾಸನ
ಆಲೂರು-ಬೇಲೂರು ಹೊಸ ಬ್ರಾಡ್ಗೇಜ್ ರೈಲ್ವೆ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಲೋಪಗಳು ಕಂಡುಬಂದಿದ್ದು, ರೈತರಿಗೆ ನ್ಯಾಯಸಮ್ಮತ ಪರಿಹಾರ ಸಿಗುತ್ತಿಲ್ಲ ಎಂದು ಅರಕೇರಿಮಠ ರಾಷ್ಟ್ರೀಯ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ರೈತ ನಾಯಕ ಆದಿಯೋಗಿ ಸದಾಶಿವಯ್ಯ ಆರೋಪಿಸಿದಲ್ಲದೇ ನ್ಯಾಯ ಕೊಡಿಸದಿದ್ದರೆ ಹೋರಾಟದ ಹಾದಿ ಹಿಡಿಯುವುದಾಗಿ ಎಚ್ಚರಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಮಾಧ್ಯಮದೊಂದಿಗೆ ಮಂಗಳವಾರ ಮಾತನಾಡಿದ ಅವರು, ಭೂಸ್ವಾಧೀನಕ್ಕೆ ಸಂಬಂಧಿಸಿದ ಸರ್ವೆ ಕಾರ್ಯದಲ್ಲಿ ಹಲವು ತಪ್ಪುಗಳಾಗಿವೆ. ಸ್ವಾಧೀನಪಡಿಸಿಕೊಳ್ಳಲಿರುವ ಜಮೀನುಗಳ ನಿಖರ ಗುರುತಿಸುವಿಕೆ, ಮರಗಳು, ಬೆಳೆಗಳು, ಕಟ್ಟಡಗಳು ಹಾಗೂ ಕೊಳವೆಬಾವಿಗಳ ಮೌಲ್ಯಮಾಪನ ಸಮರ್ಪಕವಾಗಿ ನಡೆದಿಲ್ಲ. ಸಂಬಂಧಪಟ್ಟ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ಸಂತ್ರಸ್ತ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಗಮನ ಸೆಳೆಯಲು ಮನವಿ ಸಲ್ಲಿಸಲಾಗುತ್ತಿದ್ದು, ಮಂಗಳವಾರ ತಾಳೂರು-ಗುಡ್ಡೇನಹಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ರೈತರ ಸಭೆ ನಡೆಸಿ ಸಂತ್ರಸ್ತರ ಅಹವಾಲುಗಳನ್ನು ಆಲಿಸಲಾಗಿದೆ ಎಂದು ತಿಳಿಸಿದರು. ಈ ಹಿಂದೆ ಕಡಿಮೆ ದರದಲ್ಲಿ ನಡೆದ ಜಮೀನು ಮಾರಾಟವನ್ನು ಮಾನದಂಡವಾಗಿಸದೆ, ಪ್ರಸ್ತುತ ಮಾರುಕಟ್ಟೆ ಬೆಲೆಯನ್ನು ಆಧಾರವಾಗಿಟ್ಟುಕೊಂಡು ಭೂಮಿಯ ಮೌಲ್ಯ ನಿಗದಿಪಡಿಸಿ ಅದಕ್ಕೆ ಅನುಗುಣವಾಗಿ ಪರಿಹಾರ ನೀಡಬೇಕು. ರೈತರಿಗೆ ಇಂದಿನ ಮಾರುಕಟ್ಟೆ ದರದ ಮಾಹಿತಿ ನೀಡಿ ಪಾರದರ್ಶಕವಾಗಿ ಪರಿಹಾರ ನಿಗಧಿ ಮಾಡಬೇಕೆಂದು ಅವರು ಒತ್ತಾಯಿಸಿದರು. ಭೂಸ್ವಾಧೀನಗೊಳ್ಳುವ ಪ್ರದೇಶದಲ್ಲಿರುವ ಬೆಳೆ, ಮರ, ಕಟ್ಟಡ ಹಾಗೂ ಇತರೆ ಆಸ್ತಿಗಳ ಸಮಗ್ರ ಮತ್ತು ನಿಖರ ಸರ್ವೆ ನಡೆಸಬೇಕು. ವಿವಿಧ ಇಲಾಖೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕೆಂದು ಆಗ್ರಹಿಸಿದರು.ಆಲೂರು- ಬೇಲೂರು ರೈಲ್ವೆ ಯೋಜನೆಗೆ ಸಂಬಂಧಿಸಿದ ಎಲ್ಲಾ ಭಾಗೀದಾರ ಇಲಾಖೆಗಳು ಹಾಗೂ ಸಕ್ಷಮ ಅಧಿಕಾರಿಗಳ ತುರ್ತು ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ, ಪ್ರಸ್ತುತ ಮಾರುಕಟ್ಟೆ ಬೆಲೆ ಆಧರಿಸಿ ಭೂಮಿಯ ಮೌಲ್ಯ ನಿಗದಿಪಡಿಸಿ ಸಂತ್ರಸ್ತ ರೈತರಿಗೆ ಮೂರು ದಿನಗಳೊಳಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಡಳಿತ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಂತ್ರಸ್ತ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಅದರ ಸಂಪೂರ್ಣ ಹೊಣೆ ಜಿಲ್ಲಾಡಳಿತವೇ ಹೊರಬೇಕಾಗುತ್ತದೆ ಎಂದು ಆದಿಯೋಗಿ ಸದಾಶಿವಯ್ಯ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ನಂದೀಶ್, ಯೋಗೀಶ್, ವೆಂಕಟೇಶ್, ಸೋಮಶೇಖರ್, ಗೋಪಾಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.