ಕನ್ನಡಪ್ರಭ ವಾರ್ತೆ ಮಂಗಳೂರು

ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಒತ್ತಡವನ್ನು ಕಡಿಮೆಗೊಳಿಸುವ ಜತೆಗೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳ ಅಧಿಕಾರಿಗಳು ‘ಬೆಂಗಳೂರು ಚಲೋ’ ನಡೆಸಿ ಪ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದ.ಕ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅನಿಲ್ ಕೆ. ಪೂಜಾರಿ ಹೇಳಿದರು.

ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮ ಆಡಳಿತ ಅಧಿಕಾರಿ ಉಷಾ ಮಾತನಾಡಿ, ನಮಗೆ ಕಚೇರಿ ನಿರ್ವಹಣೆಗೆ ಅನುದಾನ ಬರುತ್ತಿಲ್ಲ. ಆ್ಯಪ್ ಒತ್ತಡ ಹೆಚ್ಚಾಗುತ್ತಿದ್ದು ಸರ್ವರ್ ಡೌನ್‌ನಿಂದ ಕೆಲಸಗಳು ತ್ವರಿತಗತಿಯಲ್ಲಿ ಆಗುತ್ತಿಲ್ಲ. ಇದರಿಂದ ನಾವು ಬೈಗುಳ ತಿನ್ನಬೇಕಾಗುತ್ತದೆ. ನಮ್ಮ ಮೂಲಭೂತ ಸೌಕರ್ಯ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯವಾದೀತು ಎಂದರು.ಸಂಘದ ಉಪಾಧ್ಯಕ್ಷ ಪ್ರದೀಪ್ ಕುಮಾರ್, ಖಜಾಂಜಿ ಧರ್ಮ ಸಾಮ್ರಾಜ್, ಜಂಟಿ ಕಾರ್ಯದರ್ಶಿ ಅವಿನಾಶ್ ಬಿಲ್ಲವ, ಕಂದಾಯ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಜಯಂತ್, ಕೋಶಾಧಿಕಾರಿ ಪ್ರಸನ್ನ ಪಕಳ, ಸಂಘದ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.