ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಸುದ್ದಿಗಳಿಂದ ಜನಾಭಿಪ್ರಾಯ ಸಂಗ್ರಹ ಆಗುತ್ತದೆ, ಆ ಜನಾಭಿಪ್ರಾಯ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದರು.ಅವರು ಶುಕ್ರವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಸಂಘದ ಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ನಾನು ಪತ್ರಿಕೆಯಲ್ಲಿ ಬರೆದ ಲೇಖನಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿತ್ತು. ಆದರೆ ಈ ಕುರಿತು ಸಂಬಂಧಪಟ್ಟ ಸಚಿವರನ್ನು ಮಾತನಾಡಿಸಿದರೂ ಸಮಸ್ಯೆಗೆ ಪರಿಹಾರ ದೊರೆಯುತ್ತಿರಲಿಲ್ಲ. ಅದಕ್ಕಾಗಿ ಪತ್ರಿಕೋದ್ಯಮದಲ್ಲಿ ಹೊಸ ಪ್ರಯೋಗ ಮಾಡಿದೆ. ಲೇಖನವನ್ನು ಓದಿದ ಸಾವಿರಾರು ಜನರಿಂದಲೇ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಸಿದೆ. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ತಂದುಕೊಟ್ಟರು. ಹೀಗೆ ನಾನು ಮಾಡಿದ ಪ್ರಯೋಗದಿಂದ ಸಾವಿರಾರು ಸಮಸ್ಯೆಗಳು ಪರಿಹಾರವಾಗಿದ್ದವು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಹಾಗೂ ಕುಂದಪ್ರಭ ವಾರ ಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಸ್ಥಾಪನಾ ದಿನದ ಬಗ್ಗೆ ಮಾತನಾಡಿ, ಪತ್ರಕರ್ತರ ಸಂಘ ಸ್ಥಾಪನೆಯಿಂದ ಪತ್ರಕರ್ತರಲ್ಲಿ ಒಗ್ಗಟ್ಟು ಮೂಡಿಸಲು ಸಾಧ್ಯವಾಯಿತು. ಯಾವುದೇ ಸುದ್ದಿ ಮಾಡುವಾಗ ಅದಕ್ಕೆ ಸಂಬಂಧಿಸಿದ ದಾಖಲೆ ಇದ್ದರೆ ಪತ್ರಕರ್ತರು ಯಾರಿಗೂ ಭಯಪಡಬೇಕಾದ ಅಗತ್ಯ ಇಲ್ಲ. ಪತ್ರಕರ್ತರು ಸುಳ್ಳು, ಪ್ರಚೋದನಕಾರಿ ಸುದ್ದಿಗಳ ಬಗ್ಗೆ ಎಚ್ಚರವಹಿಸಿ ಸುದ್ದಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
1998ರಿಂದ ಈವರೆಗೆ ಸೇವೆ ಸಲ್ಲಿಸಿರುವ ಸಂಘದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ನಾಮಫಲಕವನ್ನು ಅನಾವರಣಗೊಳಿಸಿದ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ನ ಆಡಳಿತ ನಿರ್ದೇಶಕ ರವೀಂದ್ರ ಕೆ.ಶೆಟ್ಟಿ ಮಾತನಾಡಿ, ನಾವು ಮಾಡುವ ಕೆಲಸದಲ್ಲಿ ನಿಷ್ಠೆ ಇದ್ದರೆ ಅದರಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ನಿಜವಾದ ಸಮಾಜ ಸೇವೆಯಲ್ಲಿ ಸಿಗುವ ತೃಪ್ತಿ ಎಲ್ಲೂ ಸಿಗುವುದಿಲ್ಲ ಎಂದು ಹೇಳಿದರು.ಈ ಸಂದರ್ಭ ಸಂಘದ ಸ್ಥಾಪಕ ಸದಸ್ಯರಾದ ಹಿರಿಯ ಪತ್ರಕರ್ತ, ಕನ್ನಡಪ್ರಭದ ಜಿಲ್ಲಾ ವರದಿಗಾರ ಸುಭಾಶ್ಚಂದ್ರ ವಾಗ್ಳೆ ಅವರಿಗೆ ಸ್ಥಾಪನಾ ದಿನದ ಸನ್ಮಾನವನ್ನು ನೆರವೇರಿಸಲಾಯಿತು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.
ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನ ಬೈಲು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.