ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ರೈತರ ವಿಷಯದಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿರುವ ನಡೆ ಖಂಡನೀಯ. ಮಾನ, ಮರ್ಯಾದೆ ಇದ್ದರೆ ಮೊದಲು ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಲಿ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಆಗ್ರಹಿಸಿದ್ದಾರೆ.

ಕೋಟ್ಯಂತರ ರು. ಮೌಲ್ಯದ ಕಬ್ಬು ಬೆಳೆ ನೀರಿಲ್ಲದೆ ಒಣಗುತ್ತಿವೆ. ಈಗಾಗಲೇ ಶೇ.60ರಷ್ಟು ಬೆಳೆ ಸಂಪೂರ್ಣ ಹಾಳಾಗಿದೆ. ರೈತರಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಹಲವು ದಿನದಿಂದ ಒತ್ತಾಯಿಸಲಾಗುತ್ತಿದೆ. ಆದರೂ ರಾಜ್ಯ ಸರ್ಕಾರದಿಂದ ಕನಿಷ್ಠ ಮಟ್ಟದ ಸ್ಪಂದನೆ ನೀಡದಿರುವುದು ರೈತರ ವಿರೋಧಿ ಧೋರಣೆ ತೋರಿಸುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ತುರ್ತು ಗಮನಹರಿಸುವಂತೆ ಬಿಜೆಪಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಮಾಡಲಾಗಿತ್ತು. ಅದೇ ರೀತಿ ಇನ್ನೆರೆಡು ದಿನದಲ್ಲಿ ನಾಲೆಗೆ ನೀರು ಹರಿಸಲಾಗುವುದು ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದರು. ಆದರೀಗ ಒಂದು ವಾರ ಕಳೆದರೂ ನೀರು ಹರಿಸಿಲ್ಲ. ಗುತ್ತಿಗೆದಾರನಿಗೆ ಅನುಕೂಲ ಮಾಡಲೆಂದು ಇಂತಹ ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಒಣಗುತ್ತಿರುವ ಬೆಳೆಯ ಬಗ್ಗೆ ರಾಜ್ಯ ಸರ್ಕಾರ ಕನಿಷ್ಠ ಕಾಳಜಿ ತೋರದಿರುವುದು ದುರಂತ. ಈಗಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಅವರು ಜಿಲ್ಲೆಯಲ್ಲಿ ಒಣಗಿದ ಕಬ್ಬು ಬೆಳೆ ಪರಿಶೀಲಿಸಿದ್ದಾರೆ. ಮೂರು ದಿನದೊಳಗೆ ನಾಲೆಗೆ ನೀರು ಹರಿಸದಿದ್ದರೆ ಕೆಆರ್‌ಎಸ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದೆ ರೈತರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾಲೆಗೆ ನೀರು ಹರಿಸುವ ಜೊತೆಗೆ ರಾಜ್ಯ ಸರ್ಕಾರ ಬೆಳೆ ಹಾನಿಯ ಸಮಗ್ರ ಸಮೀಕ್ಷೆ ನಡೆಸಬೇಕು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಒಣಗಿರುವ ಬೆಳೆಯ ಬಗ್ಗೆ ಮಾಹಿತಿ ಪಡೆದು ನಷ್ಟದ ವಿವರವನ್ನು ಸರ್ಕಾರಕ್ಕೆ ನೀಡಬೇಕು. ಈ ಮೂಲಕ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರು. ವಿಳಂಬವಿಲ್ಲದೆ ರೈತರ ಖಾತೆಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.