ಧಾರವಾಡದಲ್ಲಿ ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಆಗಮಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಬಾಡಿಗೆ ಮನೆಗಳಲ್ಲಿ ವಾಸವಿದ್ದು, ದಿನನಿತ್ಯದ ಆಹಾರ ವೆಚ್ಚಗಳ ಹೆಚ್ಚಳದಿಂದ ತೀವ್ರ ಆರ್ಥಿಕ ಮತ್ತು ಮಾನಸಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಧಾರವಾಡ:
ನಗರದಲ್ಲಿನ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು ಹಾಗೂ ವಿದ್ಯಾರ್ಥಿ ವಸತಿ ಪ್ರದೇಶಗಳ ಆಸುಪಾಸಿನಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದು ಮತ್ತು ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗುತ್ತಿರುವ ಮದ್ಯ ಮಾರಾಟ ಕೇಂದ್ರಗಳ ಕುರಿತು ಸೂಕ್ತ ಕ್ರಮಕೈಗೊಳ್ಳಲು ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ವಕೀಲರ ಬಳಗದ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ಕಾನೂನು ಸಚಿವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಧಾರವಾಡದಲ್ಲಿ ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಆಗಮಿಸಿದ್ದಾರೆ. ಸಪ್ತಾಪುರ, ಜಯನಗರ, ಶ್ರೀನಗರ, ಕಲ್ಯಾಣನಗರ ಹಾಗೂ ಕವಿವಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಬಾಡಿಗೆ ಮನೆಗಳಲ್ಲಿ ವಾಸವಿದ್ದು, ದಿನನಿತ್ಯದ ಆಹಾರ ವೆಚ್ಚಗಳ ಹೆಚ್ಚಳದಿಂದ ತೀವ್ರ ಆರ್ಥಿಕ ಮತ್ತು ಮಾನಸಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮೇಲ್ಕಂಡ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದಲ್ಲಿ, ಕಡಿಮೆ ವೆಚ್ಚದಲ್ಲಿ ಪೌಷ್ಟಿಕ ಆಹಾರ ದೊರೆಯುವ ಮೂಲಕ ವಿದ್ಯಾರ್ಥಿಗಳ ಬದುಕಿಗೆ ಮಹತ್ತರ ನೆರವಾಗಲಿದೆ ಎಂದು ಮನವರಿಕೆ ಮಾಡಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳು ಮತ್ತು ವಿದ್ಯಾರ್ಥಿ ವಸತಿ ಪ್ರದೇಶಗಳ ಸಮೀಪದಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಕೆಲವು ಬಾರ್ ಹಾಗೂ ಮದ್ಯ ಮಾರಾಟ ಕೇಂದ್ರಗಳು ಶೈಕ್ಷಣಿಕ ವಾತಾವರಣಕ್ಕೆ ಅಡಚಣೆ ಉಂಟು ಮಾಡುತ್ತಿದ್ದು, ವಿದ್ಯಾರ್ಥಿಗಳ ಮಾನಸಿಕ ಶಾಂತಿ ಹಾಗೂ ಭವಿಷ್ಯಕ್ಕೆ ಮಾರಕವಾಗಿವೆ. ಸಾರ್ವಜನಿಕ ಹಿತ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಇಂತಹ ಮದ್ಯ ಮಾರಾಟ ಕೇಂದ್ರಗಳ ಸ್ಥಳಾಂತರ ಅಥವಾ ಪುನರ್ ಪರಿಶೀಲನೆಗೆ ಸಂಬಂಧಿಸಿದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಈ ವೇಳೆ ಪರಿಷತ್ತಿನ ಜಿಲ್ಲಾಧ್ಯಕ್ಷ ಹನುಮಂತ ದಾಸರ, ವಕೀಲರಾದ ಅರುಣ ಮೂಡಿ, ನಾಗರಾಜ ಎತ್ತಿನಮನೆ, ಮಹೇಶ ಬಾರಕೇರ, ರುಕ್ಮಿಣಿ ಕಾಮಣ್ಣನವರ, ರೇಣುಕಾ ಕಲ್ಯಾಣಿ ಇದ್ದರು.