ಕನ್ನಡಪ್ರಭ ವಾರ್ತೆ ಇಂಡಿ

ಮಳೆಯ ಅಭಾವ ಆದರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನ‌ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕುಡಿಯುವ ನೀರಿನ‌ ಸಮಸ್ಯೆಯಾದರೆ ಪಿಡಿಒಗಳನ್ನೇ ಹೊಣೆ ಮಾಡಬೇಕಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನಗರದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಕರೆದ ಟಾಸ್ಕ್‌ಫೊರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಎಸಿಗೆ ಸೂಚಿಸಿದ ಶಾಸಕರು, ಮುಂಬರುವ ಜುಲೈ ತಿಂಗಳಲ್ಲಿ ಮಳೆ ಬಾರದೆ ಇದ್ದರೆ ಜಾನುವಾರುಗಳಿಗೆ ಮೇವು ಬ್ಯಾಂಕ್, ಗೋಶಾಲೆ ತೆರೆಯಲು ವ್ಯವಸ್ಥೆ ಮಾಡಿಕೊಳ್ಳಬೇಕು. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಬರುವುದಕ್ಕಿಂತ ಮುಂಚೆ ಇದ್ದ ಜಲಮೂಲಗಳನ್ನು ದುರಸ್ತಿಗೊಳಿಸಿ, ರೀಚಾರ್ಜ್ ಆಗುವಂತೆ ಮಾಡಬೇಕು. ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಬೇಕು. ಗ್ರಾಪಂ ನೋಡಲ್ ಅಧಿಕಾರಿಗಳು ವಾರಕ್ಕೊಮ್ಮೆ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ವಾಸ್ತವತೆ ಅರಿತು, ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕಳಕಳಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಶಾಲೆ,ಕಾಲೇಜು,ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಆಗಬಹುದಾದ ಗ್ರಾಮಗಳ ಪಟ್ಟಿ ತಯಾರಿಸಬೇಕು. ನೀರು ಮಿತವಾಗಿ ಬಳಕೆ ಮಾಡಿಕೊಳ್ಳುವಂತೆ ಸಾರ್ವಜನಿಕ ಜಾಗೃತಿ ಮೂಡಿಸಬೇಕು. ನಿಸರ್ಗದ ಮೇಲೆ ಭಾರ ಹಾಕಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ತಿಳಿಸಿದರು.


ಪ್ರತಿ ಸೋಮವಾರ ಅಧಿಕಾರಿಗಳು ಟಾಸ್ಕ್‌ಫೋರ್ಸ್‌ ಸಭೆ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳಯ ಸಹ ಗ್ರಾಪಂ ಅಧಿಕಾರಿಗಳೊಂದಿಗೆ ಕೈಜೋಡಿಸಿ ಹೊರ್ತಿ ಗ್ರಾಮದ ಮೊರಾರ್ಜಿ ದೇಸಾಯಿ ಬಾಲಕರ ವಸತಿ ನಿಲಯದಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಕೂಡಲೆ ಪರಿಹರಿಸಿ, ತೊಂದರೆ ನೀಗಿಸಲು ಏನು ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಒಂದು ಅಂದಾಜು ಪತ್ರಿಕೆ ಸಿಧ್ಧಪಡಿಸಿ ಅಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಯೋಜನೆ ರೂಪಿಸಿ ಎಂದು ತಾಪಂ ಇಓ ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಯೋಜನೆ ವ್ಯಾಪ್ತಿಗೆ ಬರುವ ಹಂಜಗಿ,ಅರ್ಜನಾಳ ಕೆರೆಗಳಲ್ಲಿ ನೀರು ಇರುವಂತೆ ನೋಡಿಕೊಳ್ಳಬೇಕು. ಇಂಡಿ ನಗರದ ಎಲ್ಲಾ ವಾರ್ಡಗಳಿಗೆ ಸಮವಾಗಿ ನೀರು ಹರಿಸಬೇಕು, ಅರಣ್ಯಕರಣ ಹೆಚ್ಚಾಗುವಂತೆ ಪ್ರಯತ್ನಿಸಬೇಕು. ಸಸಿಗಳು ಉಚಿತವಾಗಿ ನೀಡಿ, ಸಸಿ ನೆಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ವಸತಿ ನಿಲಯಗಳಲ್ಲಿನ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಸಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ, ತಾಪಂ ಇಒ ಮಹಾದೇವಪ್ಪ ಏವೂರ ವೇದಿಕೆ ಮೇಲೆ ಉಪಸ್ಥಿತರಿದ್ದರು.

ತಾಲೂಕು ಮಟ್ಟದ ಅಧಿಕಾರಿಗಳಾದ ಬಿಇಒ ಎಸ್.ಆರ್ ನಡಗಡ್ಡಿ, ಸಿಪಿಐ ಪ್ರದೀಪ ಭೀಸೆ, ಅರಣ್ಯಾಧಿಕಾರಿ ಮಂಜುನಾಥ ಧೂಳೆ, ಎಸ್.ಜಿ.ಸಂಗಾಲಕ, ಉಮೇಶ ಲಮಾಣಿ, ಎಸ್.ಬಿ.ಗದ್ಯಾಳ, ಪುತಳಾಬಾಯಿ ಭಜಂತ್ರಿ, ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ದಯಾನಂದ ಮಠ,ಶಿವಾಜಿ ಬನಸೋಡೆ, ಎಸ್.ಆರ್.ಮೆಂಡೆಗಾರ ಸೇರಿದಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.