ನಗರದ ತಾಲೂಕು ಕಚೇರಿಯಿಂದ ಕರ್ತಿಕೆರೆ ಗ್ರಾಪಂವರಿಗೆ ಹಮ್ಮಿಕೊಳ್ಳಲಾಗಿದ್ದ ಎಸ್‌ಐಆರ್ ಜಾಗೃತಿಗಾಗಿ ‘ಬೈಕ್ ಜಾಥಾ’ಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಒಂದು ವೇಳೆ ಮತದಾರರಿಗೆ ಎನುಮರೇಶನ್‌ ಫಾರಂ (ಗಣತಿ ನಮೂನೆ) ಸಿಗದಿದ್ದರೆ, ತಕ್ಷಣವೇ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ನಗರದ ತಾಲೂಕು ಕಚೇರಿಯಿಂದ ಕರ್ತಿಕೆರೆ ಗ್ರಾಪಂವರೆಗೆ ಹಮ್ಮಿಕೊಳ್ಳಲಾಗಿದ್ದ ಎಸ್‌ಐಆರ್ ಜಾಗೃತಿಗಾಗಿ ‘ಬೈಕ್ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿ ಜಿಲ್ಲೆಯಲ್ಲಿ ಕಳೆದ 18 ದಿನಗಳ ಹಿಂದೆ ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಜಿಲ್ಲೆಯ ಒಟ್ಟು 9.60 ಲಕ್ಷ ಮತದಾರರಿದ್ದು, ಕೇವಲ 11 ಸಾವಿರ ಗಣತಿ ನಮೂನೆ ಗಳು ಮಾತ್ರ ವಿತರಣೆಯಾಗದೆ ಬಾಕಿ ಉಳಿದಿವೆ. ವಿಳಾಸದಲ್ಲಿ ಮತದಾರರು ಸಿಗದ ಕಾರಣ ಈ ಗಣತಿ ನಮೂನೆಗಳು ವಿತರಣೆಯಾಗಿಲ್ಲ. ಗಣತಿ ನಮೂನೆ ಸಿಗದವರು ಆತಂಕಪಡುವ ಅಗತ್ಯವಿಲ್ಲ. ಅರ್ಹ ಮತದಾರರು ತಕ್ಷಣವೇ ರಾಷ್ಟ್ರೀಯ ಮತದಾರರ ಸಹಾಯವಾಣಿ 1950 ಗೆ ಕರೆ ಮಾಡಬಹುದು ಅಥವಾ ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ, ಬಿಎಲ್‌ಒ ಅಥವಾ ತಹಸೀಲ್ದಾರ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದರೆ, ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ಗಣತಿ ನಮೂನೆ ವಿತರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿ, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ದಂತೆ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಸಿಕ್ಕಿರುವ ಅತ್ಯಂತ ಮೌಲ್ಯಯುತ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಬಿಎಲ್‌ಒಗಳು ಜನರ ಮನೆ ಬಾಗಿಲಿಗೇ ಬರಲಿದ್ದಾರೆ. ಸಾರ್ವಜನಿಕರು ತಮ್ಮಲ್ಲಿ ಯಾವುದೇ ಗೊಂದಲ ಅಥವಾ ಅನುಮಾನಗಳಿದ್ದರೆ ಅವರ ಬಳಿ ಕೇಳಿ ಪರಿಹರಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಬಳಿ ಇರಬೇಕಾದ ದಾಖಲೆಗಳನ್ನು ಬಿಎಲ್‌ಒಗಳಿಗೆ ನೀಡಿ, ಗಣತಿ ನಮೂನೆ ಸಂಪೂರ್ಣವಾಗಿ ಭರ್ತಿ ಮಾಡಿ ಅವರಿಗೆ ಮರಳಿ ಸಲ್ಲಿಸಬೇಕು. ಆಗ ಮಾತ್ರವೇ ನಮಗೆ ಆ ಹಕ್ಕು ಸಿಗುತ್ತದೆ. ಇಲ್ಲದಿದ್ದರೆ ನಾವು ಮತದಾನದ ಹಕ್ಕಿನಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಮಾತನಾಡಿ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಉತ್ತಮ ಹಂತದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸಲ್ಪಡಬೇಕು ಎಂದು ಹೇಳಿದರು.ನಮ್ಮ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಉತ್ತಮ ಪ್ರಗತಿ ಕಂಡಿದೆ. ಪ್ರಸ್ತುತ ಹಂತದಲ್ಲಿ ಮನೆ ಮನೆಗೆ ತೆರಳಿ ನೀಡಲಾಗಿರುವ ಗಣತಿ ನಮೂನೆಯನ್ನು ಸಂಬಂಧಪಟ್ಟ ಬಿಎಲ್‌ಒಗಳಿಗೆ ಮರಳಿ ಸಲ್ಲಿಸು ವುದು ಅತ್ಯಂತ ಜವಾಬ್ದಾರಿಯುತ ಹಾಗೂ ಪ್ರಮುಖ ಕೆಲಸ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.ನಗರದ ತಾಲೂಕು ಕಚೇರಿಯಿಂದ ಆರಂಭಗೊಂಡ ಬೈಕ್ ಜಾಥಾ ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ ಹಾಗೂ ಕೋಟೆ ಬಡಾವಣೆ ಮೂಲಕ ಹಾದು ಕರ್ತಿಕೆರೆ ಗ್ರಾಪಂತಿ ವ್ಯಾಪ್ತಿವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಎಸ್‌ಐಆರ್ ಕುರಿತು ಅರಿವು ಮೂಡಿಸಿತು.ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.