ಸಾರಾಂಶ
ಕುಷ್ಟಗಿ:
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ವನಮಹೋತ್ಸವ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕತೆಯ ಪರಿಣಾಮದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಸಮಾಜದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತಿವೆ. ಶುದ್ಧವಾದ ಗಾಳಿ-ಪರಿಸರ ಹಾನಿಯಾಗುತ್ತಿದೆ. ಆದ್ದರಿಂದ ಎಲ್ಲರು ಸಸಿ ನೆಡುವ ಮೂಲಕ ಪರಿಸರ ಸಮತೋಲನವಿರುವಂತೆ ನೋಡಿಕೊಳ್ಳಬೇಕಿದೆ ಎಂದರು.
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಸಂಕಲ್ಪ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಆದ್ಯತೆ ಆಗಬೇಕಿದ್ದು ಎಲ್ಲರೂ ಕೈಜೋಡಿಸಬೇಕು ಎಂದ ಅವರು, ಸಾಮೂಹಿಕವಾಗಿ ಮಾಡಿದ ಪ್ರಯತ್ನಗಳು ಮಾತ್ರ ಶಾಶ್ವತ ಫಲ ನೀಡಬಲ್ಲವು. ವಿದ್ಯಾರ್ಥಿಗಳು ಸಂಘಟಿತರಾಗಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಾಂತೇಶ ಚವಲಗಿ, ವಲಯ ಅರಣ್ಯಾಧಿಕಾರಿ ಶಿವರಾಜ ಮೇಟಿ, ಉಪವಲಯ ಅರಣ್ಯಾಧಿಕಾರಿ ಅಬ್ದುಲಸಮಿ, ಪರಶುರಾಮ್, ಮಂಜುನಾಥ, ಗುರುರಾಜ, ಶ್ರೀಧರ, ರಾಘವೇಂದ್ರ, ವಕೀಲರ ಸಂಘದ ಅಧ್ಯಕ್ಷ ಎಸ್.ಜಿ. ಪಾಟೀಲ್, ಸಹಾಯಕ ಸರ್ಕಾರಿ ಅಭಿಯೋಜಕ ರಾಯನಗೌಡ ಎಲ್, ಇಂದಿರಾ ಸುಹಾಸಿನಿ, ವಕೀಲರ ಸಂಘದ ಕಾರ್ಯದರ್ಶಿ ಆನಂದ ಡೊಳ್ಳಿನ, ನ್ಯಾಯಾಂಗ ಇಲಾಖೆ ಸಿಬ್ಬಂದಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ, ವಕೀಲರು ಇದ್ದರು.