ಬ್ಯಾಡಗಿ: ಹೊರಗುತ್ತಿಗೆ ನೌಕರರ ನೂತನ ಕನಿಷ್ಠ ವೇತನ ಆದೇಶ ತಕ್ಷಣ ಜಾರಿಗೊಳಿಸುವಂತೆ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಗುರುರಾಜ ಕಂಬಳಿ ಆಗ್ರಹಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತಂತೆ ಮಾತನಾಡಿದ ಅವರು ನೂತನ ಕನಿಷ್ಠ ವೇತನ ಆದೇಶ ತಕ್ಷಣ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೂ ಸಹ ಎಲ್ಲ ಇಲಾಖೆಗಳು ಇದನ್ನು ಅನುಷ್ಠಾನಕ್ಕೆ ತಂದಿಲ್ಲ ಎಂದು ಆರೋಪಿಸಿದರು.

ನೂತನ ಕನಿಷ್ಠ ವೇತನ ಆದೇಶ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಹಾಗೂ ಮಾಜಿ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮೊದಲು ಅಭಿನಂದನೆ ಸಲ್ಲಿಸಿದ ಅವರು ಮೇ 22, 2026ರಂದು ಸರಕಾರ ಹೊರಡಿಸಿರುವ ನೂತನ ಕನಿಷ್ಠ ವೇತನ ಆದೇಶವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ತಕ್ಷಣದಿಂದಲೇ ಅನುಷ್ಠಾನಗೊಳಿಸಬೇಕು, ರಾಜ್ಯ ಕಾರ್ಮಿಕ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಕಾರ್ಮಿಕ ಅಧಿಕಾರಿಗಳಿಗೆ ನೂತನ ವೇತನ ಆದೇಶದ ಅನುಷ್ಠಾನ ಕುರಿತು ಸ್ಪಷ್ಟ ನಿರ್ದೇಶನ ನೀಡಬೇಕು. ವಿವಿಧ ಇಲಾಖೆಗಳಲ್ಲಿ ಅನ್ವಯವಾಗುವ ಮೂಲ ವೇತನ ತುಟ್ಟಿಭತ್ಯೆ ಹಾಗೂ ಕಾರ್ಮಿಕರಿಗೆ ದೊರೆಯಬೇಕಾದ ಒಟ್ಟು ವೇತನದ ವಿವರವನ್ನು ತಕ್ಷಣ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

2023ರ ಏ.1ರಿಂದಲೇ ಈ ವೇತನ ಪದ್ಧತಿ ಜಾರಿಗೆ ಬರಬೇಕಾಗಿತ್ತು. ಆದರೆ ಕೆಲವು ಖಾಸಗಿ ಕಂಪನಿಗಳು ನ್ಯಾಯಾಲಯದ ಮೊರೆ ಹೋದ ಕಾರಣ ಆದೇಶ ಅನುಷ್ಠಾನ ವಿಳಂಬವಾಗಿದೆ. ಆದ್ದರಿಂದ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೊರಗುತ್ತಿಗೆ ನೌಕರರಿಗೆ 2023ರ ಏ.1ರಿಂದಲೇ ನೂತನ ವೇತನವನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ, ಬಾಕಿ ಉಳಿದಿ ರುವ ಹೆಚ್ಚುವರಿ ವೇತನವನ್ನು ಕೂಡಲೇ ಪಾವತಿಸಬೇಕು ಅಲ್ಲದೇ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯ ಸೌಲಭ್ಯವನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸರ್ಕಾರ ಅಗತ್ಯ ಆದೇಶ ಹೊರಡಿಸಬೇಕು ಎಂದು ಅಗ್ರಹಿಸಿದರು ಈ ಸಂದರ್ಭದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.