ಜಿಲ್ಲೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಯಶಸ್ವಿ: ಚಂದ್ರಭೂಪಾಲ್

| Published : Aug 15 2025, 01:00 AM IST

ಜಿಲ್ಲೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಯಶಸ್ವಿ: ಚಂದ್ರಭೂಪಾಲ್
Share this Article
  • FB
  • TW
  • Linkdin
  • Email

ಸಾರಾಂಶ

ಗ್ಯಾರೆಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು, ಇನ್ನೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಗ್ಯಾರೆಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು, ಇನ್ನೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದರು.

ಬುಧವಾರ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹರನ್ನು ತಲುಪಲು ಅಧಿಕಾರಿಗಳು ಸೇರಿದಂತೆ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ ಎಂದರು.

ಜಿಲ್ಲಾ ಮಟ್ಟದ ಉಪಾಧ್ಯಕ್ಷರಾದ ಶಿವಣ್ಣ ಹಾಗೂ ಸದಸ್ಯರಾದ ಶಿವಾನಂದ್ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ರಚನೆಯಾಗುವ ಜಾಗೃತಿ ಸಮಿತಿ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅವರ ಪಾತ್ರವೇನು ಎಂದು ಪ್ರಶ್ನಿಸಿದ ಅವರು, ಸಮಿತಿ ಸದಸ್ಯರ ಹೆಸರನ್ನು ಹಾಗೂ ಕುಂದು ಕೊರತೆಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ಆಹಾರ ಇಲಾಖೆಯ ಉಚಿತ ಟೋಲ್‌ಫ್ರೀ ಸಂಖ್ಯೆಯನ್ನು ಸಹ ಪ್ರತಿ ನ್ಯಾಯ ಬೆಲೆ ಅಂಗಡಿಯಲ್ಲಿ ಬರೆಸಬೇಕು ಎಂದು ಹೇಳಿದರು.

ಶಿವಮೊಗ್ಗ ತಾಲೂಕು ಸಮಿತಿ ಅಧ್ಯಕ್ಷ ಎಚ್ ಎಂ ಮಧು ಮಾತನಾಡಿ, ತಾಲೂಕು ಮಟ್ಟದ ಸಭೆಗೆ ಮೆಸ್ಕಾಂ ಅಧಿಕಾರಿಗಳು ಹಾಜರಾಗುತ್ತಿಲ್ಲ, ತಾಲೂಕು ಸಮಿತಿ ಸಭೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಬರಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 401790 ಮಹಿಳೆಯರು ಅಂದರೆ ಶೇ.94.63 ನೋಂದಣಿಯಾಗಿದ್ದು, ಜೂನ್ ಮಾಹೆವರೆಗೆ 308416 ರು. ಮಹಿಳೆಯರಿಗೆ ಹಣ ಪಾವತಿಯಾಗಿದೆ ಎಂದು ತಿಳಿಸಿದರು.

ಆಹಾರ ಇಲಾಖೆಯ ಉಪನಿರ್ದೇಶಕರಾದ ಅವಿನ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿಯಿಂದ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 1368324 ಜನರು ನೋಂದಣಿಯಾಗಿದ್ದು, ಈವರೆಗೆ ಯೋಜನೆಯಡಿ 360.54 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಜಿಲ್ಲೆಯಿಂದ ಈವರೆಗೆ 52977358 ಮಹಿಳಾ ಪ್ರಯಾಣಿಕರು ಅಂದರೆ ಶೇ.63 ರಷ್ಟು ಫಲಾನುಭವಿಗಳು ಉಚಿತವಾಗಿ ಪ್ರಯಾಣ ಮಾಡಿದ್ದು, ನಿಗಮಕ್ಕೆ 3797.98 ಕೋಟಿ ರು. ಆದಾಯ ಲಭಿಸಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ರಾಮಚಂದ್ರ ತಿಳಿಸಿದರು.

ಮೆಸ್ಕಾಂ ಅಧಿಕಾರಿ ಮಾತನಾಡಿ, ಗೃಹಜ್ಯೋತಿ ಯೋಜನೆಯಡಿ ಈವರೆಗೆ 469298 ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು ಸರ್ಕಾರ ಒಟ್ಟು 48104.25 ಕೋಟಿ ರು. ವೆಚ್ಚ ಮಾಡಿದೆ ಎಂದು ತಿಳಿಸಿದರು.

ಉದ್ಯೋಗಾಧಿಕಾರಿ ಖಲಂದರ್ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಈವೆರೆಗೆ ಒಟ್ಟು 6894 ಫಲಾನುಭವಿಗಳು ನೋಂದಣಿಯಾಗಿದ್ದು 5,59,29,000 ರು.ಗಳನ್ನು ಪಾವತಿಸಲಾಗಿದೆ ಎಂದರು.

ಯುವನಿಧಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ನೋಂದಣಿಯಾಗಲು ಪ್ರೇರೇಪಿಸುವ ಪೋಸ್ಟರ್‌ನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.