ರಾಜ್ಯ ಸರ್ಕಾರ, ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿದೆ.

ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಜಾನಪದ ಸಂಗೀತ, ಬೀದಿ ನಾಟಕ ಕಾರ್ಯಕ್ರಮಕ್ಕೆ ಜಿಪಂ ಆವರಣದಲ್ಲಿ ಸೋಮವಾರ ಚಾಲನೆ ದೊರೆಯಿತು.

ಉದ್ಘಾಟಿಸಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ. ಚಿದಾನಂದಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ತಲಾದಾಯ ಹೆಚ್ಚಳವಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ ರಾಜ್ಯ ಸರ್ಕಾರ, ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿದೆ. ಇವು ಬಡ, ಶೋಷಿತ, ಹಿಂದುಳಿದ ವರ್ಗದ ಜನರ ಜೀವನ ಸುಧಾರಣೆಗೆ ಪೂರಕವಾಗಿವೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನರಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿವೆ ಎಂದು ಅಭಿಮತ ವ್ಯಕ್ತಪಡಿಸಿದರು.ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಶಕ್ತಿ ತುಂಬಲಾಗಿದೆ. ಅನ್ನಭಾಗ್ಯದಿಂದ ಹಸಿವು ನೀಗಿಸಲಾಗುತ್ತಿದೆ.

ಗೃಹಜ್ಯೋತಿ ಮೂಲಕ ಕತ್ತಲೆ ಮನೆಗಳಿಗೆ ಬೆಳಕು ನೀಡಲಾಗಿದೆ. ಗೃಹಲಕ್ಷ್ಮಿಯಿಂದ ಮನೆ ಯಜಮಾನಿಯರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುತ್ತಿದೆ. ಅದೇ ರೀತಿಯಾಗಿ ಯುವನಿಧಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಸಹಾಯಧನ ಒದಗಿಸಲಾಗುತ್ತಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲೂ ಪಂಚ ಗ್ಯಾರಂಟಿ ಯೋಜನೆಗಳು ಶೇ.98ರಷ್ಟು ಅನುಷ್ಠಾನಗೊಳಿಸಿದೆ. ಶೇ.100ಕ್ಕೆ ನೂರರಷ್ಟು ಪ್ರಗತಿ ಸಾಧಿಸಲಾಗುವುದು. ಜಿಲ್ಲೆಯಲ್ಲಿ ಯಾವುದೇ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಲ್ಲಿ, ಆಯಾ ತಾಲೂಕುಗಳ ಅಧ್ಯಕ್ಷರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಆಯ್ದ ತಾಲೂಕುಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಅಕ್ಷಯ ಕಲಾ ಟ್ರಸ್ಟ್ ನ ಅಧ್ಯಕ್ಷ ಯರಗುಡಿ ಸುಂಕಪ್ಪ ಮತ್ತು ತಂಡದವರಿಂದ ಗ್ಯಾರಂಟಿ ಯೋಜನೆಗಳ ಕುರಿತ ಜಾನಪದ ಸಂಗೀತ ಪ್ರಸ್ತುತಪಡಿಸಿದರು. ಧಾತ್ರಿ ರಂಗ ಸಂಸ್ಥೆಯ ಅಧ್ಯಕ್ಷ ಸಿರಿಗೇರಿ ಮಂಜು ತಂಡದವರಿಂದ ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ ಪ್ರದರ್ಶಿಸಿದರು.

ಬಳ್ಳಾರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಕುರುಗೋಡು ತಾಲೂಕು ಅಧ್ಯಕ್ಷ ಜಿ.ಬಸವನಗೌಡ, ಸಂಡೂರು ತಾಲೂಕು ಅಧ್ಯಕ್ಷ ನೂರುದ್ದೀನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಇದ್ದರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಜಾನಪದ ಸಂಗೀತ, ಬೀದಿ ನಾಟಕ ಕಾರ್ಯಕ್ರಮಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ

ಜಿಪಂ ಆವರಣದಲ್ಲಿ ಚಾಲನೆ ನೀಡಿದರು.