ನಗರದಲ್ಲಿ ನಡೆದ ಬೃಹತ್‌ ಉದ್ಯೋಗ ಮೇಳದಲ್ಲಿ ಸಂಸದ ಸುನೀಲ್‌ ಬೋಸ್‌ ಅವರು 190 ಯುವ ಜನತೆಗೆ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು.

- ಸಂಸದ ಸುನೀಲ್‌ ಬೋಸ್‌ರಿಂದ ನೇಮಕಾತಿ ಪತ್ರ ವಿತರಣೆ

- ೪೮೦ ಅಭ್ಯರ್ಥಿಗಳು 2ನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ: ನಗರದಲ್ಲಿ ನಡೆದ ಬೃಹತ್‌ ಉದ್ಯೋಗ ಮೇಳದಲ್ಲಿ ಸಂಸದ ಸುನೀಲ್‌ ಬೋಸ್‌ ಅವರು 190 ಯುವ ಜನತೆಗೆ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜನೆಗೊಂಡಿತ್ತು.

ಈ ವೇಳೆ ಸಂಸದರು ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿ ಶುಭಹಾರೈಸಿದರು.

ಉದ್ಯೋಗ ಮೇಳಕ್ಕೆ ಆನ್‌ಲೈನ್‌ನಲ್ಲಿ ೬೬೮, ಆಫ್‌ಲೈನ್‌ನಲ್ಲಿ ೬೦೨ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೧೨೯೦ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ ೪೯೫ ಪುರುಷರು, ೭೯೦ ಸ್ತ್ರೀಯರಿದ್ದರು. ಮೇಳದಲ್ಲಿ ೧೦೧ ಕಂಪನಿಗಳು ಭಾಗವಹಿಸಿದ್ದವು. ೮೫ ಪುರುಷರು, ೧೦೮ ಮಹಿಳೆಯರು ಸೇರಿದಂತೆ ಒಟ್ಟು ೧೯೩ ಅಭ್ಯರ್ಥಿಗಳು ಸ್ಥಳದಲ್ಲಿಯೇ ಆಯ್ಕೆಯಾಗಿದರು.

೧೯೦ ಪುರುಷರು, ೨೯೦ ಮಹಿಳೆಯರು ಸೇರಿದಂತೆ ಒಟ್ಟು ೪೮೦ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ೨ನೇ ಹಂತದ (ಶಾರ್ಟ್‌ಲಿಸ್ಟ್) ಸಂದರ್ಶನಕ್ಕೆ ಆಯ್ಕೆಯಾದರು.

ಜೆಎಚ್‌. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಅವರು ಉದ್ಘಾಟಿಸಿದರು.

ಈ ವೇಳೆ ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್‌ (ಮುನ್ನಾ), ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್‌, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್‌ ಮೀನಾ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಶೃತಿ. ಡಿ.ಸಿ, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಸೋಮೇಶ್ವರ ಸೇರಿ ಹಲವರಿದ್ದರು.

---

ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸದ ಸುನೀಲ್‌ ಬೋಸ್ ಅವರು ನೇಮಕಾತಿ ಪತ್ರ ವಿತರಿಸಿದರು.