ಪ್ರವಾಹ ಪೀಡಿತ ಗ್ರಾಮಗಳಿಗೆ ಉಸ್ತುವಾರಿ ಸಚಿವರ ಭೇಟಿ

| Published : Aug 03 2024, 12:33 AM IST

ಸಾರಾಂಶ

ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಕಾಲೇಜು ಬಳಿಯಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು, ಶಾಸಕ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್ ಅವರೊಂದಿಗೆ ಭೇಟಿ ಕೊಟ್ಟು ವೀಕ್ಷಿಸಿದರು.

ಕನ್ನಡಪ್ರಭವಾರ್ತೆ ಕೊಳ್ಳೇಗಾಲ

ತಾಲೂಕಿನ ನದಿ ಪಾತ್ರದ ಪ್ರವಾಹ ಪೀಡಿತ ಗ್ರಾಮಗಳು ಹಾಗೂ ಪ್ರವಾಹ ಸಂತ್ರಸ್ತರಿಗೆ ತೆರೆಯಲಾಗಿರುವ ಕಾಳಜಿ ಕೇಂದ್ರಗಳಿಗೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಪಟ್ಟಣದ ಮಹದೇಶ್ವರ ಕಾಲೇಜು ಬಳಿಯಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವರು, ಶಾಸಕ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್ ಅವರೊಂದಿಗೆ ಭೇಟಿ ಕೊಟ್ಟು ವೀಕ್ಷಿಸಿದರು. ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿರುವ ಊಟ, ಉಪಹಾರಗಳು ಇನ್ನಿತರ ಸೌಲಭ್ಯಗಳನ್ನು ಪರಿಶೀಲಿಸಿದರು.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತನಾಡಿದರು. ನಿಮಗೆ ನೀಡುತ್ತಿರುವ ಊಟ ಉಪಹಾರ ಚೆನ್ನಾಗಿದೆಯೇ, ಇತರೆ ಸೌಕರ್ಯಗಳು ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ನೀರು ಕಡಿಮೆಯಾದ ನಂತರ ನಿಮ್ಮ ಗ್ರಾಮಗಳಿಗೆ ಕಳುಹಿಸಿಕೊಡಲಿದ್ದೇವೆ. ಅಲ್ಲಿಯವರೆಗೂ ನೀವು ಇಲ್ಲಿಯೇ ಉಳಿಯಬೇಕು. ಯಾವುದೇ ತೊಂದರೆಗಳಿದ್ದರೂ ಪರಿಹರಿಸುತ್ತೇವೆ ಎಂದರು.

ಮುಳ್ಳೂರು ಗ್ರಾಮದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೂ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ಮಳೆ ಹೆಚ್ಚಾದಾಗ ಉಂಟಾಗುವ ಪ್ರವಾಹದಿಂದ ಸಾಕಷ್ಟು ವರ್ಷಗಳಿಂದ ತೊಂದರೆ ಅನುಭವಿಸುತ್ತಿದೇವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ಪ್ರವಾಹ ಪೀಡಿತ ದಾಸನಪುರ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವರು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಹಾನಿಯಾಗಿರುವ ಮನೆಗಳನ್ನು ವೀಕ್ಷಿಸಿದರು. ಸ್ಥಳೀಯರ ಮನವಿ ಆಲಿಸಿ ಹಾನಿಗೀಡಾದ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಸರ್ವೆ ಕಾರ್ಯ ನಡೆಸಲು ಸೂಚಿಸಲಾಗುವುದು. ಬೆಳೆ ಹಾನಿಗೂ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಈಗಾಗಲೇ ಅಧಿಕಾರಿಗಳಿಗೆ ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ವಿವರವಾದ ವರದಿ ನೀಡಲು ತಿಳಿಸಲಾಗಿದೆ. ಸಮೀಕ್ಷೆ ವರದಿ ಬಂದ ಕೂಡಲೇ ಎಲ್ಲಾ ಪರಿಹಾರ ಕ್ರಮಗಳಿಗೆ ಮುಂದಾಗಲಿದ್ದೇವೆ ಎಂದರು. ಮುಳ್ಳೂರು ಗ್ರಾಮದಲ್ಲಿ ಭೇಟಿ ನೀಡಿದ ವೇಳೆ ಸ್ಥಳೀಯರು ಇಲ್ಲಿನ ಸಣ್ಣ ಕಾಲುವೆಗಳಲ್ಲಿ ಹೂಳು ತೆಗೆಯಬೇಕು. ಗ್ರಾಮದಲ್ಲಿ ನೀರು ಆವೃತವಾಗದಂತೆ ಶಾಶ್ವತ ಕಾಮಗಾರಿ ಕೈಗೊಳ್ಳಬೇಕು. ಜಾನುವಾರುಗಳಿಗೆ ಸೂಕ್ತ ಮೇವು ಒದಗಿಸಬೇಕು ಎಂದು ಸಚಿವರಿಗೆ ಕೋರಿದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಮಾಜಿ ಶಾಸಕ ಆರ್. ನರೇಂದ್ರ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾರೊತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಮಂಜುಳಾ ಇದ್ದರು.