ಸಾರಾಂಶ
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ಆಯೋಜಿಸಲಾದ ರಾಜ್ಯಮಟ್ಟದ ಅಂತರ್ಕಾಲೇಜು ‘ಪ್ರಜ್ಞಾ - ೨೦೨೪ ಫೆಸ್ಟ್’ ಅನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ವಿದ್ಯಾರ್ಥಿಗಳ ವಿದ್ಯಾರ್ಥಿ ಜೀವನ ಹಾಗೂ ಸಾಮಾಜಿಕ ಸ್ಥಾನಮಾನವನ್ನು ಉತ್ತಮ ಪಡಿಸುವುದಕ್ಕಾಗಿಯೇ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯು ಸ್ಥಾಪನೆಗೊಂಡಿದೆ. ಮುಂದೆಯೂ ಈ ಸಂಸ್ಥೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ಪ್ರಗತಿಯನ್ನು ಹೊಂದಲಿ ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ಆಯೋಜಿಸಲಾದ ರಾಜ್ಯಮಟ್ಟದ ಅಂತರ್ಕಾಲೇಜು ‘ಪ್ರಜ್ಞಾ - ೨೦೨೪ ಫೆಸ್ಟ್’ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಈ ಪ್ರಜ್ಞಾ ಫೆಸ್ಟ್ ಪದವಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಕಟಪಡಿಸಲು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳೊಂದಿಗೆ ಅಧ್ಯಾಪಕರ ಪ್ರತಿಭಾ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ಪೂರ್ಣಪ್ರಜ್ಞ ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಪಿ.ಶ್ರೀರಮಣ ಐತಾಳ್ ಹೇಳಿದರು.ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ. ಎ.ಪಿ. ಭಟ್, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ, ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರತಿಮಾ ಬಾಳಿಗಾ, ಪೂರ್ಣಪ್ರಜ್ಞ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್., ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಪ್ರಜ್ಞಾ ಫೆಸ್ಟಿನ ಮುಖ್ಯ ಸಂಯೋಜಕ ಡಾ. ರಮೇಶ್ ಟಿ.ಎಸ್., ಕಾಲೇಜಿನ ವಿದ್ಯಾರ್ಥಿ ಸಂಘ ಅಧ್ಯಕ್ಷ ಮಾನುಷ್ ಕೋಟ್ಯಾನ್ ಉಪಸ್ಥಿತರಿದ್ದರು.
ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಜ್ಯೋತಿ ಆಚಾರ್ಯ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ ಹೆಗಡೆ ಪ್ರಾರ್ಥಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷ್ಮೀ ಸಿ. ಭಟ್ ಸ್ವಾಗತಿಸಿದರು. ಎಂಕಾಂ ವಿಭಾಗದ ಉಪನ್ಯಾಸಕ ಮುರುಳಿ ವಂದಿಸಿದರು.