ಸಾರಾಂಶ
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು.ಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ತಾನು ಆಯ್ಕೆಯಾಗಿ ಬಂದ ನಂತರ ಕ್ಷೇತ್ರದಾದ್ಯಂತ ರಸ್ತೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆಯನ್ನು ನೀಡುತ್ತಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿಶೇಷವಾಗಿ ಸಾರ್ವಜನಿಕರು ಇಂತಹ ಅಭಿವೃದ್ಧಿ ಕಾಮಗಾರಿಗಳಿಗೆ ತನ್ನೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಜನರ ಬೇಡಿಕೆಗಳಿಗೆ ಸ್ಪಂದಿಸುತ್ತಾ ಆದ್ಯತೆ ಮೇರೆಗೆ ತಾನು ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಶಾಸಕರು ಪುನರುಚ್ಚರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಪ್ರಭು ಸುಬ್ಬಯ್ಯ, ಪ್ರಮುಖರಾದ ಶ್ರೀಮಂಗಲ ಪಾಕ್ಸ್ ಉಪಾಧ್ಯಕ್ಷ ಪಲ್ವಿನ್ ಪೂಣಚ್ಚ, ಅಪ್ಪಚ್ಚಂಗಡ ಮೋಟಯ್ಯ, ಚೊಟ್ಟೆ ಯಾಂಡಮಾಡ ಉದಯ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.