ಭಗವದ್ಗೀತೆಯಲ್ಲಿ ಕರ್ತವ್ಯ, ಧರ್ಮ, ನಿಷ್ಠೆ, ಆತ್ಮವಿಶ್ವಾಸ, ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಧೈರ್ಯದಿಂದ ಎದುರಿಸುವುದು ಸೇರಿದಂತೆ ಬದುಕಿಗೆ ಅಗತ್ಯವಾದ ಹಲವು ಸಂದೇಶಗಳನ್ನು ನೀಡಲಾಗಿದೆ. ಆದ್ದರಿಂದ ಭಗವದ್ಗೀತೆಯನ್ನು ಕೇವಲ ಓದುವುದಷ್ಟೇ ಅಲ್ಲದೆ, ಅದರ ಸಾರವನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಇಂದಿನ ಯುವಜನತೆ ಶ್ರೀಕೃಷ್ಣನ ಸಂದೇಶಗಳನ್ನು ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಉತ್ತಮ ಹಾಗೂ ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಭಗವಾನ್ ಶ್ರೀಕೃಷ್ಣರು ಸಮಾಜಕ್ಕೆ ಒಳಿತಾಗುವಂತಹ ಅನೇಕ ಮೌಲ್ಯಯುತ ಸಂದೇಶಗಳನ್ನು ನೀಡಿದ್ದಾರೆ. ಅವರ ಜೀವನ, ಚಿಂತನೆ ಹಾಗೂ ಭಗವದ್ಗೀತೆಯಲ್ಲಿನ ಬೋಧನೆಗಳು ಇಂದಿಗೂ ಪ್ರತಿಯೊಬ್ಬರ ಬದುಕಿಗೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಠಲ ಸಮುದಾಯ ಭವನ (ಪಾಂಡುರಂಗ ಸ್ವಾಮಿ ದೇವಸ್ಥಾನ)ದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶ್ರೀಕೃಷ್ಣರು ನೀಡಿರುವ ಆದರ್ಶ, ಚಿಂತನೆಗಳು ಹಾಗೂ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಜೊತೆಗೆ, ನಮ್ಮ ಮಕ್ಕಳಿಗೂ ಬಾಲ್ಯದಿಂದಲೇ ಈ ಮೌಲ್ಯಗಳನ್ನು ಪರಿಚಯಿಸಿ ಅವರಲ್ಲಿ ಉತ್ತಮ ಚಿಂತನೆ, ಕರ್ತವ್ಯಪ್ರಜ್ಞೆ, ಮಾನವೀಯತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಬೇಕು ಎಂದು ನುಡಿದರು.ಸತ್ಯ, ಧರ್ಮ ಹಾಗೂ ನ್ಯಾಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂಬುದನ್ನು ಅರ್ಜುನನಿಗೆ ಬೋಧಿಸಿದ್ದಾರೆ. ಅನ್ಯಾಯದ ವಿರುದ್ಧ ಧೈರ್ಯವಾಗಿ ನಿಂತು, ಧರ್ಮ ಮಾರ್ಗದಲ್ಲಿ ಸಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಮಹಾಭಾರತ ಸಾರುತ್ತದೆ ಎಂದು ಹೇಳಿದರು.
ಭಗವದ್ಗೀತೆಯಲ್ಲಿ ಕರ್ತವ್ಯ, ಧರ್ಮ, ನಿಷ್ಠೆ, ಆತ್ಮವಿಶ್ವಾಸ, ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಧೈರ್ಯದಿಂದ ಎದುರಿಸುವುದು ಸೇರಿದಂತೆ ಬದುಕಿಗೆ ಅಗತ್ಯವಾದ ಹಲವು ಸಂದೇಶಗಳನ್ನು ನೀಡಲಾಗಿದೆ. ಆದ್ದರಿಂದ ಭಗವದ್ಗೀತೆಯನ್ನು ಕೇವಲ ಓದುವುದಷ್ಟೇ ಅಲ್ಲದೆ, ಅದರ ಸಾರವನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಇಂದಿನ ಯುವಜನತೆ ಶ್ರೀಕೃಷ್ಣನ ಸಂದೇಶಗಳನ್ನು ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಉತ್ತಮ ಹಾಗೂ ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ಮಕ್ಕಳು ಭಗವದ್ಗೀತೆಯನ್ನು ಓದಿ, ಅದರ ಪ್ರತಿಯೊಂದು ಸಾಲಿನಲ್ಲಿರುವ ಅರ್ಥ ಹಾಗೂ ಜೀವನ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಪೋಷಕರು ಸಹ ಭಗವದ್ಗೀತೆಯನ್ನು ಓದಿ, ಅದರಲ್ಲಿರುವ ಸತ್ಯ, ಧರ್ಮ, ನ್ಯಾಯ, ಕರ್ತವ್ಯ ಮತ್ತು ಮಾನವೀಯತೆಯ ಸಂದೇಶಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಇಸ್ಕಾನ್ ದೇವಸ್ಥಾನದ ಅಧ್ಯಕ್ಷ ಅನಿಲ್ ಕುಮಾರ್ ಉಪಸ್ಥಿತರಿದ್ದರು.