ಕಬಿನಿ ಜಲಾಶಯ ಭರ್ತಿಯಾಗಿ ಕಾವೇರಿ ನದಿಗೆ 10 ಸಾವಿರ ಕ್ಯುಸೆಕ್ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಪಾತವು ಮೈದುಂಬಿ ಹರಿಯುತ್ತಿದೆ. ಆದರೆ, ಗಗನಚುಕ್ಕಿ ಜಲಪಾತದಲ್ಲಿ ಶನಿವಾರ ಇದ್ದ ನೀರಿನ ಪ್ರಮಾಣಕ್ಕೂ ಸೋಮವಾರ ಹರಿಯುತ್ತಿರುವ ನೀರಿನ ಪ್ರಮಾಣಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಮಿಳುನಾಡಿಗೆ ರಾಜ್ಯ ಸರ್ಕಾರ ಕೆಆರ್ ಎಸ್ ಜಲಾಶಯದಿಂದ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂಬ ಆರೋಪದ ನಡುವೆ ತಾಲೂಕಿನ ಶಿವನಸಮುದ್ರ ಬಳಿಯ ವಿಶ್ವ ಪ್ರಸಿದ್ಧ ಗಗನಚುಕ್ಕಿ ಜಲಪಾತದಲ್ಲಿ ನೀರು ಹರಿವಿನ ಪ್ರಮಾಣ ಏರಿಕೆಯಾಗಿದೆ.

ಕಳೆದ ಕೆಲ ದಿನಗಳಿಂದ ಈ ಪ್ರದೇಶದ ಸುತ್ತಮುತ್ತ ಮಳೆಯಾಗಿಲ್ಲ. ಆದರೂ ಗಗನಚುಕ್ಕಿ ಜಲಪಾತದಲ್ಲಿ ನೀರು ಹರಿವಿನ ಪ್ರಮಾಣ ಕಳೆದ ಎರಡು ದಿನಗಳಲ್ಲಿ ಏರಿಕೆಯಾಗಿರುವುದು ಪ್ರಶ್ನೆ ಮಾಡುವಂತಿದೆ.

ಕಬಿನಿ ಜಲಾಶಯ ಭರ್ತಿಯಾಗಿ ಕಾವೇರಿ ನದಿಗೆ 10 ಸಾವಿರ ಕ್ಯುಸೆಕ್ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಪಾತವು ಮೈದುಂಬಿ ಹರಿಯುತ್ತಿದೆ. ಆದರೆ, ಗಗನಚುಕ್ಕಿ ಜಲಪಾತದಲ್ಲಿ ಶನಿವಾರ ಇದ್ದ ನೀರಿನ ಪ್ರಮಾಣಕ್ಕೂ ಸೋಮವಾರ ಹರಿಯುತ್ತಿರುವ ನೀರಿನ ಪ್ರಮಾಣಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದೆ.

ರೈತ ಸಂಘದ ತಾಲೂಕು ಅಧ್ಯಕ್ಷ ಹಿಟ್ಟನಹಳ್ಳಿ ಶಿವರುದ್ರ ಮಾತನಾಡಿ, ಕೆಆರ್ ಎಸ್ ಜಲಾಶಯದಿಂದ ರಾಜ್ಯ ಸರ್ಕಾರ ಕದ್ದುಮುಚ್ಚಿ ನೀರು ಹರಿಸುತ್ತಿದೆ. ಇದು ರೈತರನ್ನು ದಿಕ್ಕುತಪ್ಪಿಸುವ ಕೆಲಸವಾಗಿದೆ. ನಮ್ಮ ಬೆಳೆಗಳ ರಕ್ಷಣೆಗೆ ಸಮರ್ಪಕ ನೀರು ಬಿಡದ ಸರ್ಕಾರದ ನಡೆ ಸರಿಯಲ್ಲ. ಈಗಾಗಲೇ ಕರ್ನಾಟಕದಲ್ಲಿ ಭೀಕರ ಬರಗಾಲ ಎದುರಾಗಿದೆ. ಮಳೆ ಪ್ರಮಾಣ ಅತ್ಯಂತ ಕಡಿಮೆ ಆಗಿದೆ ಎಂದು ಕಿಡಿಕಾರಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸಲು ನಿರ್ದೇಶನ ನೀಡಿದ್ದು, ಇದರ ವಿರುದ್ಧ ರೈತ ಸಂಘ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ ನೀರು ಹರಿಸದಂತೆ ಆಗ್ರಹಿಸಿದ್ದವು. ಆದರೆ, ಇದೀಗ ಕೆಆರ್ ಎಸ್ ಜಲಾಶಯದಿಂದ ರಾಜ್ಯ ಸರ್ಕಾರ ಕದ್ದು ಮುಚ್ಚಿ ನೀರು ಹರಿಸುತ್ತಿರುವುದು ಗಗನಚುಕ್ಕಿ ಜಲಪಾತದ ಬಳಿ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದನ್ನು ನೋಡಿದರೆ ತಿಳಿಯುತ್ತದೆ ಎಂದು ಎಂದು ಖಂಡಿಸಿದ್ದಾರೆ.

ತಮಿಳುನಾಡಿಗೆ ಕೆಆರ್ ಎಸ್ ಅಣೆಕಟ್ಟೆಯಿಂದ ಐದು ಸಾವಿರ ಕ್ಯುಸೆಕ್ ಗೂ ಹೆಚ್ಚು ನೀರು ಹರಿಸಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಸತ್ತೇಗಾಲ ಬಳಿಯ ಕಾವೇರಿ ನದಿಯಲ್ಲಿದ್ದ ನೀರಿನ ಪ್ರಮಾಣ ಏಕಾಏಕಿ ಏರಿಕೆಯಾಗಿದೆ. ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ನೀರು ಹರಿಸುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ತಾಲೂಕಿನಲ್ಲಿ ಮಳೆ ಇಲ್ಲದೇ ರೈತರ ಬೆಳೆಗಳು ಒಣಗುತ್ತಿವೆ. ನಮಗೆ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುತ್ತಿರುವುದು ಸರಿಯಲ್ಲ. ಕೂಡಲೇ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.