ಸಾರಾಂಶ
- ರಾಜ್ಯ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ವಾಸುದೇವ ಮಾಹಿತಿ - - - ಕನ್ನಡಪ್ರಭ ವಾರ್ತೆ ಜಗಳೂರು
ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಯನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ, ಇಲಾಖೆಯ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅ.೪ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅ.೪ ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ವಾಸುದೇವ ಹೇಳಿದರು.ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಈ ಸಂಬಂಧ ಮನವಿ ಮಾಡಲಾಗಿದೆ. ಪ್ರತಿಭಟನೆ ಹಿನ್ನೆಲೆ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ಸೇರಿ ಮೂಲಸೌಕರ್ಯಗಳು ಹೊರತುಪಡಿಸಿ ಇತರೇ ಯಾವುದೇ ಕೆಲಸ ಇರುವುದಿಲ್ಲ. ನಾಗರೀಕರು ಸಹಕರಿಸಬೇಕು ಎಂದರು.
ಜಿಲ್ಲೆಯಿಂದ 4 ಸಾವಿರ, ತಾಲೂಕಿನಿಂದ 1 ಸಾವಿರ ಸೇರಿದಂತೆ ರಾಜ್ಯಾದ್ಯಂತ 2 ಲಕ್ಷಕ್ಕೂಅಧಿಕ ಗ್ರಾಮ ಪಂಚಾಯಿತಿಗಳ ಎಲ್ಲ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದರು.ಬೇಡಿಕೆಗಳ ಈಡೇರಿಸಿ:
ತಾಲೂಕು ಖಜಾಂಚಿ ಹಾಗೂ ಪಿಡಿಒ ಶಶಿಧರ್ ಪಾಟೀಲ್ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ ರಾಜ್ಯದ ಶೇ.೭೦ರಷ್ಟು ಜನರಿಗೆ ವಿವಿಧ ಸೇವೆಗಳನ್ನು ನೀಡಿರುವ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಕರ ವಸಲಿಗಾರ ನೀರಗಂಟಿ ಜವಾನರ ಸ್ವಚ್ಛತಾಗಾರರು ಮತ್ತು ಪತ್ರಾಂಕಿತ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದಿಂದ ಸಮಸ್ತ ಅಧಿಕಾರಿಗಳು ನೌಕರರು ಆಡಳಿತ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಲಾಗಿದೆ. ಆದರೂ, ಇಲಾಖೆಯಾಗಲಿ ಸರ್ಕಾರವಾಗಲಿ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿವೆ ಎಂದರು.ಒಕ್ಕೂಟದ ಸಲಹೆಗಾರ ಆರ್. ಮಾರುತೇಶ್ ತಮಲೇಹಳ್ಳಿ ಮಾತನಾಡಿದರು. ಉಪಾಧ್ಯಕ್ಷೆ ಯೋಗಾನಂದ ಬಂಗಾರಪ್ಪ, ಕಾರ್ಯದರ್ಶಿ ಸತೀಶ್, ಶಶೀಧರ್ ಪಾಟೀಲ್, ಸೊಕ್ಕೆ ಪಿಡಿಓ ಶಿವಕುಮಾರ್, ಎಸ್ಡಿಎ ಹನುಮಂತಪ್ಪ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಮತ್ತಿತರಿದ್ದರು.
- - -ಕೋಟ್ ಕೇರಳ ಮಾದರಿಯಲ್ಲಿ ಗ್ರಾಪಂ ಸದಸ್ಯರಿಗೆ ಗೌರವಧನ, ಉಚಿತ ಬಸ್ ಪಾಸ್ ಆರೋಗ್ಯ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು
- ವೀರೇಶ್, ಅಧ್ಯಕ್ಷ, ತಾಲೂಕು ಗ್ರಾಪಂ ಸದಸ್ಯರ ಒಕ್ಕೂಟ- - -
-01ಜೆಜಿಎಲ್1:ಜಗಳೂರು ಪಟ್ಟಣದಲ್ಲಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ವಾಸುದೇವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.