ಪೌರ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

| Published : May 28 2025, 12:08 AM IST

ಸಾರಾಂಶ

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ನಿಲ್ಲಿಸವುದಿಲ್ಲ, ಕರ್ತವ್ಯಕ್ಕೂ ಹಾಜರಾಗುವುದಿಲ್ಲ, ಇದು ನಮ್ಮ ರಾಜ್ಯ ಸಂಘದ ನಿಲುವು ಎಂದು ಪ್ರತಿಭಟನಾಕಾರರು ಘೋಷಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಪೌರ ನೌಕರರು ಕರ್ತವ್ಯಕ್ಕೆ ಗೈರಾಗಿ ನಗರದ ನಗರಸಭಾ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.ನಗರಸಭಾ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ನಿಲ್ಲಿಸವುದಿಲ್ಲ, ಕರ್ತವ್ಯಕ್ಕೂ ಹಾಜರಾಗುವುದಿಲ್ಲ, ಇದು ನಮ್ಮ ರಾಜ್ಯ ಸಂಘದ ನಿಲುವು ಎಂದು ಪ್ರತಿಭಟನಾಕಾರರು ಘೋಷಿಸಿದರು.ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯದ ಜ್ಯೋತಿ ಸಂಜೀವಿನಿ ಯೋಜನೆಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರು, ವಾಹನ ಚಾಲಕರು, ಲೋಡರ್‌ಗಳು, ಕ್ಲೀನರ್‌ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರನ್ನು ನೇರ ಪಾವತಿಗೆ ಒಳಪಡಿಸಬೇಕು.ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್ಯ ವೇತನ ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ವಾಹನ ಚಾಲಕರು, ನೀರು ಪೂರೈಕೆ ನೌಕರರು, ನೇರ ಪಾವತಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು, ಪೌರಕಾರ್ಮಿಕರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.ನ್ಯಾಯಯುತವಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಂಘವು ಇದುವರೆಗೆ ಮುಖ್ಯಮಂತ್ರಿ, ಪೌರಾಡಳಿತ ಸಚಿವರು, ನಗರಾಭಿವೃದ್ಧಿ ಸಚಿವರು, ಇಲಾಖೆಗಳ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶಕರು ಸೇರಿದಂತೆ ವಿವಿಧ ಹಂತಗಳ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಕೊಟ್ಟಿದೆ. ಇದುವರೆಗೆ ನಮ್ಮ ಮನವಿಗೆ ಯಾರೂ ಸ್ಪಂದಿಸದಿರುವುದರಿಂದ ಸಂಘದ ರಾಜ್ಯ ಅಧ್ಯಕ್ಷರ ಆದೇಶದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.ಪೌರ ಕಾರ್ಮಿಕರು, ಲೋಡರ್‌ಗಳು, ಕ್ಲೀನರ್‌ಗಳು, ನೀರು ಸರಬರಾಜುದಾರರು, ಯುಜಿಡಿ, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ಸಂಘದಡಿ ಬರುವ ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರದಲ್ಲಿ ಭಾಗವಹಿಸಿದ್ದರು.ಮುಷ್ಕರದಲ್ಲಿ ಶಿವಶಂಕರ್ ಆರಾಧ್ಯ, ವೆಂಕಟನಾಯಕ, ನಾಗರಾಜು, ಜಿ.ರಾಜಪ್ಪ, ಮಂಜುನಾಥ್, ವೆಂಕಟನಾಯಕ ಪುಷ್ಪಾ, ಸಿದ್ದಪ್ಪಾಜಿ, ರೂಪ, ಪಳನಿಸ್ವಾಮಿ, ಮಹೇಶ್, ಸಂತೋಷ, ಸಿದ್ದರಾಜು, ಶ್ರೀಕಂಠಸ್ವಾಮಿ, ಅಬ್ದುಲ್ ಪೌರನೌಕರರು ಭಾಗವಹಿಸಿದ್ದರು.-----------೨೭ಸಿಎಚ್‌ಎನ್೩

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಪೌರ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ನಗರದ ನಗರಸಭಾ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.