ಸಾರಾಂಶ
ವಿವಿಧ ಬೇಡಿಕೆ ಈಡೇರಿಸಲು ಆಗ್ರಹ । ನಗರಸಭೆ ಎದುರು ಧರಣಿ । ಕೆಲಸಕ್ಕೆ ಗೈರಾಗಿ ಆಕ್ರೋಶ । ಶೀಘ್ರ ಕ್ರಮಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ನಗರಸಭೆ ಎದುರು ಮಂಗಳವಾರದಿಂದ ಅನಿರ್ದಿಷ್ಟಾವಧಿಯ ಮುಷ್ಕರವನ್ನು ಆರಂಭಿಸಿದ್ದಾರೆ.
ರಾಜ್ಯ ಪೌರ ಸೇವಾ ನೌಕರರ ಸಂಘದ ಕರೆಯ ಮೇರೆಗೆ ಮಂಗಳವಾರದಿಂದ ಧರಣಿ ಕೈಗೊಂಡಿರುವ ಪೌರ ಸೇವಾ ನೌಕರರು ಮೊದಲ ದಿನ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಇದೇ ವೇಳೆ ಮಾತನಾಡಿದ ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಣ್ಣಯ್ಯ, ಪಂಚಾಯತ್ ರಾಜ್ ಇಲಾಖೆಯ ನೌಕರರಂತೆ ನಮ್ಮನ್ನು ಕೂಡ ಅದೇ ಮಾದರಿಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕೆಜಿಐಡಿ ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುತ್ತಿರುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ಕಾಯಂಗೊಳಿಸಲಾಗಿದೆ. ಆದರೆ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿಲ್ಲ, ಕಳೆದ 30 ವರ್ಷಗಳಿಂದ ವಾಟರ್ ಮ್ಯಾನ್ಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ನೇರ ಪಾವತಿ ಯೋಜನೆಯಡಿಗೆ ತರಬೇಕೆಂದು ಒತ್ತಾಯಿಸಿದರು.ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವ ತೀರ್ಮಾನ ಕೈಗೊಂಡು ಭರವಸೆ ನೀಡಿದರೆ ಮುಷ್ಕರವನ್ನು ವಾಪಸ್ ಪಡೆಯುತ್ತೇವೆ. ಇಲ್ಲದಿದ್ದರೆ ಮುಷ್ಕರವನ್ನು ತೀವ್ರತರದಲ್ಲಿ ಮುಂದುವರಿಸುತ್ತೇವೆಂದು ಎಚ್ಚರಿಸಿದ ಅವರು, ಈ ಸಂಬಂಧ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ 45 ದಿನಗಳ ಗಡುವು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲದ ಹಿನ್ನೆಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆಂದರು.
ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಪೌರ ಸೇವಾ ನೌಕರರು ಎದುರಿಸುತ್ತಿರುವ ಹಲವು ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಪ್ರತಿ ಇಲಾಖೆ, ಸಚಿವರಿಗೆ, ಸರ್ಕಾರಕ್ಕೆ ಸಲ್ಲಿಸಿ ಒತ್ತಾಯಿಸಿದ್ದರೂ ಗಮನಹರಿಸಿಲ್ಲ, ನೇರ ಪಾವತಿ ಮತ್ತು ಗುತ್ತಿಗೆ ಆಧಾರದ ನೌಕರರು, ಮನೆ ಮನೆ ಕಸ ಸಂಗ್ರಹಣೆ ನೌಕರರು ನಗರಸಭೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಕಾಯಂ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.ತಮ್ಮ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ, ಸರ್ಕಾರ ಈ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಸೂಕ್ತ ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ನಗರಸಭೆ ಕಚೇರಿ ವ್ಯವಸ್ಥಾಪಕ ರವಿ ಮಾತನಾಡಿ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 74ನೇ ಸಂವಿಧಾನಾತ್ಮಕ ತಿದ್ದುಪಡಿಯಾಗಿದ್ದರೂ ಪೌರ ನೌಕರರಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ಕಳೆದ 50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ನೌಕರರ ನ್ಯಾಯಯುತವಾದ ಬೇಡಿಕೆಗಳು ಈಡೇರಿಲ್ಲ. ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ದೂರಿದರು.ಪೌರಸೇವಾ ನೌಕರರಿಗೆ ಆರೋಗ್ಯ ವಿಮೆ ನೀಡದೆ ಸರ್ಕಾರ ತಾತ್ಸಾರ ಮನೋಭಾವ ತಾಳುತ್ತಿದೆ. ಕೂಡಲೇ ಪೌರ ನೌಕರರಿಗೆ ಕೆಜಿಐಡಿ ಸೌಲಭ್ಯ ನೀಡಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು ನಗರಸಭೆಯ ಎಲ್ಲಾ ವಿಭಾಗಗಳ ನೌಕರರು ಪಾಲ್ಗೊಂಡಿದ್ದರು.