ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15 ರಂದು ಸಡಗರ, ಸಂಭ್ರಮದೊಂದಿಗೆ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಚರಿಸಲು ಅಧಿಕಾರಿಗಳು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಶಿಷ್ಟಾಚಾರ ಹಾಗೂ ಶಿಸ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶಿಸ್ತು, ವ್ಯವಸ್ಥಿತ ಹಾಗೂ ವಿಜೃಂಭಣೆಯಿಂದ ಅಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ನಿಯೋಜಿತ ಜವಾಬ್ದಾರಿಗಳನ್ನು ಪ್ರತಿಯೊಬ್ಬ ಅಧಿಕಾರಿಯೂ ನಿಷ್ಠೆಯಿಂದ ನಿರ್ವಹಿಸಬೇಕು. ಕೊನೆಯ ಕ್ಷಣದಲ್ಲಿ ಗೊಂದಲಗಳಿಗೆ ಅಸ್ಪದ ನೀಡದೇ ಮುಂಚಿತವಾಗಿಯೇ ಸರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ನಮ್ಮ ದೇಶದ ರಾಷ್ಟ್ರೀಯ ಹಬ್ಬ, ಇದರಲ್ಲಿ ಸಾರ್ವಜನಿಕರು, ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಆ.15 ರಂದು ಬೆಳಿಗ್ಗೆ 7.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 9 ಗಂಟೆಗೆ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣ ದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು ಎಂದರು.ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ಆಯಾ ತಾಲೂಕಿನ ತಹಶೀಲ್ದಾರರು ಖುದ್ದು ಶಾಸಕರಿಗೆ ಆಹ್ವಾನ ಪತ್ರಿಕೆಗಳನ್ನು ತಲುಪಿಸಬೇಕು. ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕವಾಗಿರಬೇಕು. ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಯಾಗಿ ಆಯೋಜಿಸಲು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ವೇದಿಕೆ, ಸ್ವಾಗತ, ಸಾಂಸ್ಕøತಿಕ ಸೇರಿದಂತೆ ಹಲವು ಉಪ ಸಮಿತಿಗಳನ್ನು ರಚಿಸಲಾಗಿದ್ದು, ಅದಕ್ಕೆ ಅನುಗುಣವಾಗಿ ಆಯಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಜನಪ್ರತಿನಿಧಿಗಳು, ಗಣ್ಯರು, ಮಾಧ್ಯಮದವರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು. ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಿಹಿ ತಿನಿಸು ವಿತರಿಸುವಂತಾಗಲು ಆ. 14 ರಂದೇ ಆಯಾ ಶಾಲೆಗಳಿಗೆ ಸಿಹಿ ತಿನಿಸು ತಲುಪಬೇಕು. ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದರು.
ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಭೂಸ್ವಾಧಿನಾಧಿಕಾರಿ ವೆಂಕಟೇಶ್ ನಾಯ್ಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.