ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಎನ್ಎಸ್ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥ ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಎನ್ಎಸ್ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತೀಯರಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ. ಸಂವಿಧಾನವನ್ನು ಗೌರವಿಸಿ ಅದರ ಮೂಲ ಆಶಯಗಳನ್ನು ಅರಿತುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದರು.ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಸಮಾನ ವಯಸ್ಕರಿಗೆ ತಲುಪುವಂತೆ ಪ್ರಚಾರ ಮಾಡಬೇಕು ಎಂದರು.
ಕಾಲೇಜಿನ ಮೈದಾನದಲ್ಲಿ ವೃತ್ತಾಕಾರದಲ್ಲಿ ಮಾನವ ಸರಪಳಿ ನಿರ್ಮಿಸಿದ ಸುಮಾರು 1,500 ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.ಕಾಲೇಜಿನ ವಿದ್ಯಾರ್ಥಿಗಳ ಬೈಕ್ ರ್ಯಾಲಿಯಲ್ಲಿ ಕಾಲೇಜಿನ ಆವರಣ ಆಗಮಿಸಿದ ಬಳಿಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ನಾಡ ಗೀತೆ ಹಾಗೂ ಸಂವಿಧಾನ ಪೀಠಿಕೆ ಗೀತೆ ಹಾಡಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಲತಿ ಬಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಅಡಿಗ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎಸ್ ಇಂಜಗನೇರಿ ಇದ್ದರು. ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಸ್ಮಿತಾ ಶೆಣೈ ನಿರೂಪಿಸಿದರು.