ಸಾರಾಂಶ
ಅಂಗನವಾಡಿಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ದಿಢೀರ್ ಭೇಟಿ । ವಸ್ತುಸ್ಥಿತಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಿಲ್ಲೆಯ ಕೆಲ ಅಂಗನವಾಡಿ ಕೇಂದ್ರಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಕೆ.ಬಿ.ಗೀತಾ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಆ.14ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸದಸ್ಯ ಕಾರ್ಯದರ್ಶಿ ತಾಲೂಕಿನ ಕಣಿವೆ ಪುರ, ಹೆಗ್ಗಡೆ ಹಳ್ಳಿ ಗ್ರಾಮ, ಅಚರಲ ಹಳ್ಳಿ ದಂಡ ದಾಸರಹಳ್ಳಿ, ಲಿಂಗನ ಹಳ್ಳಿ, ಕೋಣ ಘಟ್ಟ -2 ಮತ್ತು ಕೋಣ ಘಟ್ಟ-1 ಹೀಗೆ ಒಟ್ಟು 7 ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿದ್ದರು. ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡುವ ಮೂಲ ಉದ್ದೇಶ ಬಡ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿರುತ್ತದೆ. ಆದರೆ ಸ್ಥಳೀಯ ಅಂಗನವಾಡಿಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಸರಿಪಡಿಸುವ ಅಗತ್ಯವಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 1612 ಅಂಗನವಾಡಿ ಕೇಂದ್ರಗಳಿದ್ದು, ಹೊಸಕೋಟೆ ತಾಲೂಕಿನಲ್ಲಿ 247, ನೆಲಮಂಗಲ ತಾಲೂಕಿನಲ್ಲಿ 287, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 379 ಹಾಗೂ ದೇವನಹಳ್ಳಿ ತಾಲೂಕಿನಲ್ಲಿ 232 ಅಂಗನವಾಡಿ ಕೇಂದ್ರಗಳಿವೆ. ಅಂಗನವಾಡಿಗಳ ವಾಸ್ತವ ಸ್ಥಿತಿ ಕುರಿತಂತೆ ಪ್ರಾಧಿಕಾರದಿಂದ ರಾಜ್ಯ ಪ್ರಾಧಿಕಾರಕ್ಕೆ ಸಂಪೂರ್ಣ ವರದಿಯನ್ನು ಸಲ್ಲಿಸಲಾಗುತ್ತಿದೆ. ಈ ಅಂಗನವಾಡಿ ಕೇಂದ್ರಗಳಿಗೆ ತಕ್ಷಣ ಜಿಲ್ಲಾ ಆಡಳಿತ ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಕೊರತೆ ಇರುವ ಎಲ್ಲಾ ಸೌಲಭ್ಯಗಳನ್ನು ತಕ್ಷಣ ಒದಗಿಸುವಂತೆ ತಿಳಿಸಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಮತ್ತು ಕಾರ್ಯದರ್ಶಿ ಬೋಲಾ ಪಂಡಿತ್ ಸೇರಿದಂತೆ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.ಫೋಟೋ:29ಕೆಡಿಬಿಪಿ4: ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಗೀತಾ ಭೇಟಿ ನೀಡಿ ಪರಿಶೀಲಿಸಿದರು.