ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಯುವ ಕಲಾವಿದರಿಗೆ ಅನ್ಯಾಯ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಲಾವಿದರ ಸಂಘದ ಅಧ್ಯಕ್ಷ ಶಿವಶಂಕರ್.ಎನ್.ಚಟ್ಟು ಆರೋಪಿಸಿದರು.
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಯುವ ಕಲಾವಿದರಿಗೆ ಅನ್ಯಾಯ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಲಾವಿದರ ಸಂಘದ ಅಧ್ಯಕ್ಷ ಶಿವಶಂಕರ್.ಎನ್.ಚಟ್ಟು ಆರೋಪಿಸಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಬಂದು ನಗರಸಭಾ ಅಧ್ಯಕ್ಷ ಸುರೇಶ್ ಜಿ,ಪಂ. ಉಪಕಾರ್ಯದರ್ಶಿ ಶೃತಿ ಅವರಿಗೆ ಮನವಿ ಮಾಡಿ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಕಲಾವಿದರನ್ನು ಕಡೆಗಣಿಸಿ, ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕರೆಸಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಅರೋಪಿಸಿದರು.ಕೆಲವು ಕಲಾ ಪ್ರಕಾರಗಳನ್ನು ಕೈ ಬಿಟ್ಟು ಕಾರ್ಯಕ್ರಮ ಮಾಡುತ್ತಿದ್ದಾರೆ, ೧೫ರಿಂದ ೨೯ ವಯಸ್ಸಿನ ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗಿದೆ, ಸರಿಯಾದ ಮಾಹಿತಿಯನ್ನು ನೀಡಿಲ್ಲ. ಯುವಜನೋತ್ಸವವನ್ನು ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಕೇಂದ್ರ ಸರ್ಕಾರದ ನೆಹರು ಯುವಕೇಂದ್ರ ವತಿಯಿಂದ ಒಂದೇ ವೇದಿಕೆಯಲ್ಲಿ ಆಯೋಜನೆ ಮಾಡುತ್ತಿರುವುದು ಖಂಡನೀಯ ಎಂದರು.ನಗರಸಭಾ ಅಧ್ಯಕ್ಷ ಎಸ್. ಸುರೇಶ್ ಮಾತನಾಡಿ, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ನಿಯಮದಂತೆ ಕಾರ್ಯಕ್ರಮ ಮಾಡಲಾಗುತ್ತಿದೆ, ನಿಮ್ಮ ಮನವಿಯನ್ನ ಸಂಬಂಧಪಟ್ಟವರಿಗೆ ನೀಡಿದರೆ ಅದನ್ನು ಕಳುಹಿಸಿಕೊಡಲಾಗುವುದು ಎಂದರು.