ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
7ನೇ ವೇತನ ಆಯೋಗದ ಜಾರಿಯಲ್ಲಿ ನಿವೃತ್ತ ನೌಕರರಿಗೆ ಆಗಿರುವ ಅನ್ಯಾಯದ ವಿರುದ್ಧ ರಾಜ್ಯ ಸಂಘದ ಹೋರಾಟಕ್ಕೆ ಜಿಲ್ಲಾ ಮತ್ತು ತಾಲೂಕು ಸಂಘಗಳ ಬೆಂಬಲ ಅತ್ಯಗತ್ಯವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಬಿ.ಶಿವಲಿಂಗಯ್ಯ ಹೇಳಿದರು.ಪಟ್ಟಣದ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಸರ್ವ ಸದಸ್ಯರ ಸಭೆಯಲ್ಲಿ 80 ವರ್ಷ ತುಂಬಿರುವ ನಿವೃತ್ತ ನೌಕರರು ಹಾಗೂ ಕಟ್ಟಡ ದಾನಿಗಳನ್ನು ಅಭಿನಂದಿಸಿ ಮಾತನಾಡಿದರು.ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿವೃತ್ತ ನೌಕರರು ಒಳಗೊಂಡಂತೆ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗುವಂತೆ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದ್ದರು. ಆನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳ ಹಿಂದೆ ನಿವೃತ್ತರಾದ ನೌಕರರನ್ನು ಬಿಟ್ಟು 2024ರ ಆ.8ರಿಂದ ಜಾರಿಗೆ ತಂದಿದೆ. ಇದರಿಂದ ಈ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ನಿವೃತ್ತ ನೌಕರರ ರಾಜ್ಯ ಸಂಘಟನೆ ಹೋರಾಟ ನಡೆಸುತ್ತಿದೆ. ಇದಕ್ಕೆ ಜಿಲ್ಲಾ ಮತ್ತು ತಾಲೂಕು ಸಂಘಗಳು ಬೆಂಬಲ ಸೂಚಿಸುವುದರೊಂದಿಗೆ ಹೋರಾಟಕ್ಕೆ ಅಣಿಯಾಗಬೇಕು ಎಂದು ಮನವಿ ಮಾಡಿದರು.ಸಂಘದ ಮಾಜಿ ಜಿಲ್ಲಾಧ್ಯಕ್ಷ ಬಿ.ಸಿದ್ದಯ್ಯ ಮಾತನಾಡಿ, ನಿವೃತ್ತ ನೌಕರರು ಸಂಘವನ್ನು ಸದಾ ಚಟುವಟಿಕೆಯಲ್ಲಿ ಇರಿಸಿಕೊಳ್ಳಬೇಕು. ಆರೋಗ್ಯ ಮತ್ತಿತರ ಕಾರಣಗಳಿಂದ ಸಂಕಷ್ಟಕ್ಕೀಡಾದ ನಿವೃತ್ತ ನೌಕರರಿಗೆ ಕನಿಷ್ಠ ಪ್ರಮಾಣದ ಆರ್ಥಿಕ ನೆರವು ನೀಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಸಂಘದಲ್ಲಿ ಮರಣ ನಿಧಿ ಪರಿಹಾರ ಮತ್ತು ನಿವೃತ್ತ ನೌಕರರು ಕಾಲಹರಣ ಮಾಡಲು ಲೈಬ್ರರಿ ಸೌಲಭ್ಯ ಮತ್ತಿತರ ಮೂಲ ಸೌಲಭ್ಯ ಒದಗಿಸಲು ಸಂಘದ ಪದಾಧಿಕಾರಿಗಳು ಚಿಂತನೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.ಈ ವೇಳೆ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುದ್ದೇಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಎಚ್. ಕೆ.ನಾರಾಯಣ್, ಉಪಾಧ್ಯಕ್ಷರಾದ ಮಂಚಯ್ಯ, ತಗಡೇಗೌಡ, ಪುಟ್ಟಸ್ವಾಮಿ, ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಸವರಾಜು, ಖಜಾಂಚಿ ವೇಣುಗೋಪಾಲಾಚಾರಿ, ಹಾಗೂ ನಿರ್ದೇಶಕರುಗಳು ಇದ್ದರು.