ಸಾರಾಂಶ
ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ೪೨ ವಿದ್ಯಾಥಿಗಳನ್ನು ಅವರ ಪೋಷಕರೊಂದಿಗೆ ಸನ್ಮಾನಿಸಿದ ವಿಶಿಷ್ಟ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ಕಾಪು
ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ೪೨ ವಿದ್ಯಾಥಿಗಳನ್ನು ಅವರ ಪೋಷಕರೊಂದಿಗೆ ಸನ್ಮಾನಿಸಿದ ವಿಶಿಷ್ಟ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ಜರುಗಿತು. ಪ್ರಾಂಶುಪಾಲರಾದಿಯಾಗಿ ಉಪನ್ಯಾಸಕ ವೃಂದವರು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸನ್ಮಾನಿಸಿ ಶುಭ ಕೋರಿದರು.ಸಂಸ್ಥೆಯ ಪ್ರಾಂಶುಪಾಲ ರಾಜೇಂದ್ರ ಪ್ರಭು ಮಾತನಾಡಿ ವಿದ್ಯಾರ್ಥಿಗಳ ಯಶಸ್ಸಿಗೆ ಪೋಷಕರು ತಮ್ಮ ಸರ್ವಸ್ವವನ್ನು ಧಾರೆ ಎರೆಯುತ್ತಾರೆ. ವಿದ್ಯಾರ್ಥಿಗಳ ಹಿತವೇ ತಮ್ಮ ಹಿತ ಎಂದು ಭಾವಿಸಿ ವಿದ್ಯಾರ್ಥಿಗಳನ್ನು ಸತ್ಪಜೆಗಳನ್ನಾಗಿ ರೂಪಿಸುವಲ್ಲಿ ಉಪನ್ಯಾಸಕರು ಮಹತ್ತರ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಗಳು ಜೀವನದಲ್ಲಿ ಪೋಷಕರನ್ನು ಗುರುಗಳನ್ನು ಎಂದೂ ಮರೆಯಬಾರದು ಎಂದರು.
ಕಾಲೇಜಿನ ಸಂಸ್ಕೃತ ಪಂಡಿತ ರಾಘವೇಂದ್ರ ಪುರಾಣಿಕ ಮಾತನಾಡಿ, ಈ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಹೊಂದಿಕೊಳ್ಳುವುದರ ಜೊತೆಗೆ ಭವಿಷ್ಯದ ಗುರಿಯತ್ತ ಗಮನವನ್ನು ಕೇಂದ್ರೀಕರಿಸಿದಾಗ ಸಮಾಜದ ಆಸ್ತಿಯಾಗಿ ಪರಿವರ್ತನೆಯಾಗಲು ಸಾಧ್ಯ. ಇದರಲ್ಲಿ ಪೋಷಕರ ಜವಾಬ್ದಾರಿಯೂ ಇದೆ ಎಂದರು.ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ಚೈತ್ರಾ ವಂದಿಸಿದರು.