ಕನ್ನಡಪ್ರಭ ವಾರ್ತೆ ಅರಕಲಗೂಡು

ಪಟ್ಟಣವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಅರಕಲಗೂಡು ಪಟ್ಟಣ ಪಂಚಾಯಿತಿ ವಿಭಿನ್ನ ಕ್ರಮ ಕೈಗೊಂಡಿದ್ದು, ರಸ್ತೆ ಹಾಗೂ ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಅದೇ ಕಸವನ್ನು ಅವರ ಮನೆಯ ಮುಂದೆ ಹಾಕುವ ಮೂಲಕ ಎಚ್ಚರಿಕೆಯ ಪಾಠ ಕಲಿಸಿದೆ.ಪಟ್ಟಣ ಪಂಚಾಯಿತಿಯಿಂದ ಪ್ರತಿದಿನ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ವಾಹನ ಸೇವೆ ಒದಗಿಸಲಾಗುತ್ತಿದೆ. ಆದರೂ ಕೆಲವರು ಕಸವನ್ನು ವಾಹನಕ್ಕೆ ನೀಡದೆ ರಸ್ತೆ, ಬೀದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುತ್ತಿರುವುದು ಕಂಡುಬಂದಿದೆ. ಇದರಿಂದ ಸ್ವಚ್ಛತೆ ಹದಗೆಡುವುದರ ಜೊತೆಗೆ ದುರ್ವಾಸನೆ, ಸೊಳ್ಳೆಗಳ ಕಾಟ ಹಾಗೂ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ, ರಸ್ತೆ ಬದಿಯಲ್ಲಿ ಕಸ ಎಸೆದಿದ್ದ ವ್ಯಕ್ತಿಯನ್ನು ಗುರುತಿಸಿದ ಪಟ್ಟಣ ಪಂಚಾಯಿತಿ ಸಿಬ್ಬಂದಿ, ಅಲ್ಲಿದ್ದ ಕಸವನ್ನು ಸಂಗ್ರಹಿಸಿ ಅದೇ ವ್ಯಕ್ತಿಯ ಮನೆಯ ಮುಂದೆ ಹಾಕುವ ಮೂಲಕ ಸಾರ್ವಜನಿಕ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಸ್ಥಳೀಯರ ಗಮನ ಸೆಳೆದಿದ್ದು, ಹಲವರು ಪಟ್ಟಣ ಪಂಚಾಯಿತಿಯ ಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಾರ್ವಜನಿಕರು ಕಸವನ್ನು ಮನೆ ಮನೆಗೆ ಬರುವ ಕಸ ಸಂಗ್ರಹಣ ವಾಹನಕ್ಕೇ ನೀಡಬೇಕು. ರಸ್ತೆ, ಚರಂಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದನ್ನು ತಪ್ಪಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.