ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲನೆಗೆ ನೂತನ ಸಚಿವ ವಿಜಯಾನಂದ ಕಾಶಪ್ಪನವರ ಜಿಲ್ಲೆಯ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಬುಧವಾರ ಭೇಟಿ ನೀಡಿ ಹಾನಿಗೊಳಗಾದ ಹೆಸರು, ತೊಗರಿ, ಸೂರ್ಯಕಾಂತಿ ಹಾಗೂ ಮೆಣಸಿನಕಾಯಿ ಬೆಳೆಗಳ ಪರಿವೀಕ್ಷಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲನೆಗೆ ನೂತನ ಸಚಿವ ವಿಜಯಾನಂದ ಕಾಶಪ್ಪನವರ ಜಿಲ್ಲೆಯ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಬುಧವಾರ ಭೇಟಿ ನೀಡಿ ಹಾನಿಗೊಳಗಾದ ಹೆಸರು, ತೊಗರಿ, ಸೂರ್ಯಕಾಂತಿ ಹಾಗೂ ಮೆಣಸಿನಕಾಯಿ ಬೆಳೆಗಳ ಪರಿವೀಕ್ಷಿಸಿದರು.ಜಿಲ್ಲೆಯ ಇಳಕಲ್ಲ ತಾಲೂಕಿನ ಹೆರೂರ ಗ್ರಾಮದ ರೈತ ಗಿರಿರಾಜ ದರಕ ಅವರ ಜಮೀನಿನಲ್ಲಿ ಬೆಳೆದ ತೊಗರಿ, ರಕ್ಕಸಗಿ ಗ್ರಾಮದ ರೈತ ಹುಲಗಪ್ಪ ತಳವಾರ ಅವರ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ, ಬಾದಾಮಿ ಮತಕ್ಷೇತ್ರ ವ್ಯಾಪ್ತಿಯ ಗುಳೇದಗುಡ್ಡ ತಾಲೂಕಿನ ಬೂದನಗಡ ಗ್ರಾಮದ ಜಮೀನುಗಳಲ್ಲಿ ಬೆಳೆಯಲಾದ ತೊಗರಿ, ಸೂರ್ಯಕಾಂತಿ, ಸಜ್ಜೆ, ಈರುಳ್ಳಿ ಹಾಗೂ ಬಾಗಲಕೋಟೆ ತಾಲೂಕಿನ ಶಿರೂರ ಗ್ರಾಮದ ಅರುಣಾ ಕಟ್ಟಿಮನಿ ಅವರ ಜಮೀನಿನಲ್ಲಿ ಬೆಳೆದ ಮೆಣಸಿನಕಾಯಿ ಬೆಳೆಗಳನ್ನು ವೀಕ್ಷಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಮಳೆಯ ಅಭಾವದಿಂದ ಬೆಳೆಗಳಿಗೆ ಉಂಟಾಗಿರುವ ನಷ್ಟದ ಕುರಿತು ರೈತರಿಂದ ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮಳೆಯ ಕೊರತೆ ಎದುರಾದ ಸಂದರ್ಭದಲ್ಲಿ ರೈತರಿಗೆ ಬೆಳೆ ನಿರ್ವಹಣೆ, ಪರ್ಯಾಯ ಬೆಳೆ ಹಾಗೂ ನಷ್ಟ ತಗ್ಗಿಸುವ ಕುರಿತು ಸೂಕ್ತ ತಾಂತ್ರಿಕ ಸಲಹೆಗಳನ್ನು ನೀಡುವ ಕೆಲಸವಾಗಬೇಕೆಂದು ಸಚಿವರು ಸೂಚಿಸಿದರು.ಬೆಳೆವಿಮೆ ಯೋಜನೆಯಡಿ ಎಷ್ಟು ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಪಡೆದು ವಿಮೆ ಸೌಲಭ್ಯ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿವೀಕ್ಷಣೆ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಹಾಗೂ ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಅವರು ಜಿಲ್ಲೆಯ ಬೆಳೆಹಾನಿ, ಮಳೆಯ ಕೊರತೆ ಹಾಗೂ ಕೃಷಿ ಪರಿಸ್ಥಿತಿಯ ಕುರಿತು ಸಚಿವರಿಗೆ ವಿವರಿಸಿದರು.ಈ ಸಂದರ್ಭದಲ್ಲಿ ರೈತರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಮಳೆಯ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ದೊರಕುವ ನಿಟ್ಟಿನಲ್ಲಿ 2 ದಿನಗಳೊಳಗಾಗಿ ವಿಸ್ತೃತ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ವಿಜಯಾನಂದ ಕಾಶಪ್ಪನವರ ಸೂಚಿಸಿದರು.
ಬದಾಮಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೂದನಗಡ ಗ್ರಾಮದಲ್ಲಿರುವ ಸೂರ್ಯಕಾಂತಿ ಬೆಳೆದ ರೈತರ ಜಮೀನಿಗೆ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಬಾಗಲಕೋಟೆ ಶಾಸಕ ಉಮೇಶ ಮೇಟಿ ಅವರು ಉಪಸ್ಥಿತರಿದ್ದು, ರೈತರಿಗೆ ಉಂಟಾದ ಬೆಳೆ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ರೈತರಿಗೆ ಸರಿಯಾಗಿ ಬೆಳೆ ಬರದೇ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಗಲೇ ರೈತರು ಬೆಳೆದ ಬೆಳೆಗಳಿಗೆ ವಿಮೆಗೆ ಒಳಗೊಡಿಸಿದ್ದು, ಸೂಕ್ತ ಪರಿಹಾರ ದೊರಕುವಂತೆ ಆಗಬೇಕು ಎಂದು ಶಾಸಕರು ಹೇಳಿದರು.ವಿವಿಧ ಬೆಳೆಗಳ ಪರಿವೀಕ್ಷಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪ ವಿಭಾಗಾಧಿಕಾರಿ ಮಹೇಶಕುಮಾರ ಮಾಲಗಿತ್ತಿ, ತಹಸೀಲ್ದಾರರಾದ ಅಮರೇಶ ಪಮ್ಮಾರ, ಪ್ರದೀಪಕುಮಾರ ಹಿರೇಮಠ, ಶಿವಾನಂದ ಬೊಮ್ಮನಗಿ, ತಾ.ಪಂ ಇಒ ಮುರಳಿದರ ದೇಶಪಾಂಡೆ, ಎಸ್.ಬಿ.ಐ ಜನರಲ್ ಇನ್ಸೂರೇನ್ಸ್ ಕಂಪನಿಯ ಜಿಲ್ಲಾ ವ್ಯವಸ್ಥಾಪಕ ಜನಾರ್ಧನ ತಿವಾರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯದ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬೆಳೆಹಾನಿ ಹಾಗೂ ಬರ ಪರಿಸ್ಥಿತಿಯ ಕುರಿತು ಪರಿವೀಕ್ಷಣೆ ಮಾಡಲು ಪ್ರಾರಂಭಿಸಲಾಗಿದ್ದು, ಪರಿವೀಕ್ಷಣೆ ವೇಳೆ ಸಂಗ್ರಹವಾಗುವ ಮಾಹಿತಿ ಹಾಗೂ ಅಧಿಕಾರಿಗಳ ವರದಿಗಳ ಆಧಾರದ ಮೇಲೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿಯ ಆಧಾರದ ಮೇಲೆ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ.
-ವಿಜಯಾನಂದ ಕಾಶಪ್ಪನವರ, ನೂತನ ಸಚಿವ