ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಶ್ರೀನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಕೆಂಪೇಗೌಡ ವೃತ್ತ ಎಂದು ನಾಮಕರಣ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.

ತಾಲೂಕ ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.

ಮದ್ದೂರು ಪಟ್ಟಣವನ್ನು ಸುಂದರ ನಗರವಾಗಿ ರೂಪಿಸುವ ಸಂಬಂಧ ಈಗಾಗಲೇ ಹಲವಾರು ಯೋಜನೆ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಕೊಲ್ಲಿ ವೃತ್ತದಿಂದ ಪ್ರವಾಸಿ ಮಂದಿರವರೆಗೆ ಹಳೇ ಎಂ.ಸಿ.ರಸ್ತೆ ಅಗಲೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಆಗಲೀಕರಣದ ನಂತರ ಆಯ್ದ ವೃತ್ತಗಳಲ್ಲಿ ಕೆಂಪೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ಸಾಧಕರ ಪ್ರತಿಮೆ ಸ್ಥಾಪನೆ ಮಾಡಿ ನಾಮಕರಣ ಮಾಡಲಾಗುವುದು ಎಂದರು.


ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇಂದು ಬೆಂಗಳೂರು ವಿಶ್ವ ಮಾನ್ಯತೆ ಗಳಿಸಿ ಸುಂದರ ನಗರವಾಗಿ ರೂಪುಗೊಳ್ಳುವ ಮೂಲಕ ಕೋಟ್ಯಂತರ ಜನರಿಗೆ ಉದ್ಯೋಗಾವಕಾಶ ಒದಗಿಸಿದೆ. ಅಲ್ಲದೇ, ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಪಡೆದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇದಕ್ಕೆ ಕೆಂಪೇಗೌಡರ ಪರಿಶ್ರಮ ಕಾರಣವಾಗಿದೆ ಎಂದರು.

ಮಹಿಳಾ ಸರ್ಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಮಾದೇಗೌಡ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ, ಕೃಷಿ, ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಪ್ರಭಾರ ತಹಸೀಲ್ದಾರ್ ಎಸ್.ವಿಶ್ವನಾಥ್, ಗ್ರೇಟ್ ಟು ತಹಸೀಲ್ದಾರ ಸೋಮಶೇಖರ್, ತಾಪಂ ಇಒ ರಾಮಲಿಂಗಯ್ಯ, ಬಿಇಒ ಎಸ್. ಬಿ.ಧನಂಜಯ, ನಗರಸಭೆ ಪೌರಾಯುಕ್ತೆ ಎಸ್.ಎನ್.ರಾಧಿಕಾ ಸೋಮಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚೆಲುವರಾಜು, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷ ಶಿವಲಿಂಗೇಗೌಡ, ಕಾರ್ಯದರ್ಶಿ ಬಸವರಾಜು, ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಶ್ರೀನರಸಿಂಹ ಸ್ವಾಮಿ ದೇವಾಲಯದ ಆವರಣದಿಂದ ಬೆಳ್ಳಿ ಸಾರೋಟಿನಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳ ಆಕರ್ಷಕ ಪ್ರದರ್ಶನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪ್ರಮುಖ ಬೀದಿಗಳಲ್ಲಿ ಪಥಸಂಚಲನದ ನಡೆಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.